ADVERTISEMENT

ಡಿ.ಬಿ.ನಟೇಶ್‌ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ: ಆರ್‌.ರಘು ಕೌಟಿಲ್ಯ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 15:40 IST
Last Updated 6 ಸೆಪ್ಟೆಂಬರ್ 2024, 15:40 IST
ಆರ್‌.ರಘು ಕೌಟಿಲ್ಯ
ಆರ್‌.ರಘು ಕೌಟಿಲ್ಯ   

ಮೈಸೂರು: ‘ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಹಿಂದಿನ ಮುಡಾ ಆಯುಕ್ತ ಡಿ.ಬಿ.ನಟೇಶ್‌ ಹಾಗೂ ಅವರೊಂದಿಗೆ ಕೈಜೋಡಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಬೇಕು’ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್‌.ರಘು ಕೌಟಿಲ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಎಂ, ಸಹಾಯಕ ಮುಖ್ಯಕಾರ್ಯದರ್ಶಿ ಉಮಾಶಂಕರ್ ಅವರಿಗೆ ಪತ್ರವನ್ನೂ ಬರೆದಿದ್ದಾರೆ.

‘50:50 ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಹಿಂದಿನ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಹೆಸರು ಕೇಳಿಬಂದ ಬಗ್ಗೆ ದೂರು ನೀಡಿದ್ದು, ಅವರನ್ನು ಅಮಾನತು ಮಾಡಲಾಗಿದೆ. ಆದರೆ, ₹10 ಸಾವಿರ ಕೋಟಿಗೂ ಅಧಿಕ ಮೌಲ್ಯದ ಸುಮಾರು 10 ಸಾವಿರ ನಿವೇಶನಗಳ ಅಕ್ರಮ ವಿತರಣೆಯ ಆರೋಪ ಹೊತ್ತಿರುವ ಡಿ.ಬಿ.ನಟೇಶ್‌ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.

ADVERTISEMENT

‘ನಟೇಶ್ ಅವರು ಮುಖ್ಯಮಂತ್ರಿಯ ಧರ್ಮಪತ್ನಿ ಅವರ ಹೆಸರಿನಲ್ಲಿ 14 ನಿವೇಶನಗಳನ್ನು ಮಂಜೂರು ಮಾಡಿಕೊಡುವ ವಿಷಯವನ್ನು ಪ್ರಾಧಿಕಾರದ ಸಭೆಗೂ ತಾರದೇ ಸರ್ಕಾರದ ಅನುಮೋದನೆಯನ್ನು ಪಡೆಯದೇ ಏಕಪಕ್ಷೀಯವಾಗಿ ಅಧಿಕೃತ ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. ನಿಯಮ ಬಾಹಿರವಾಗಿ ಮಂಜೂರಾತಿ ಪತ್ರ ಹಾಗೂ ಕ್ರಯಪತ್ರವನ್ನು ಮಾಡಿಕೊಟ್ಟು ಮುಡಾಕ್ಕೆ ನಷ್ಟವುಂಟು ಮಾಡಿದ್ದು, ವಿಳಂಬ ನೀತಿ ಅನುಸರಿಸದೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.