ಮೈಸೂರು: ‘ರಾಜ್ಯದ ಉತ್ತರ ಭಾಗದಲ್ಲಿ ತಲೆದೋರಿರುವ ನೆರೆ ಪರಿಸ್ಥಿತಿ ಬಗ್ಗೆ ಗೃಹ ಸಚಿವ ಅಮಿತ್ ಶಾ ಜತೆ ಮಾತನಾಡಿದ್ದು, ಹೆಚ್ಚಿನ ನೆರವು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ದಸರಾ ಉದ್ಘಾಟನೆಗಾಗಿ ಶುಕ್ರವಾರ ಮೈಸೂರಿಗೆ ಬಂದಿರುವ ಅವರು ಮಾಧ್ಯಮದವರ ಜತೆ ಮಾತನಾಡಿ, ‘ನೆರೆ ಹಾವಳಿಗೆ ಒಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ್ದೇನೆ. 5-6 ಜಿಲ್ಲೆಗಳಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಹಾನಿಯಾಗಿದೆ. ನಷ್ಟದ ಬಗ್ಗೆ ಅಂದಾಜು ಮಾಡಿ ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದೇನೆ’ ಎಂದರು.
ಸಂತ್ರಸ್ತರಿಗೆ ಪರಿಹಾರ ನೀಡಲು ಎಲ್ಲ ಸಿದ್ಧತೆ ಮಾಡ ಲಾಗಿದೆ. ಹಣ ಬಿಡುಗಡೆ ಮಾಡ ಲಾಗಿದ್ದು, ಜಿಲ್ಲಾಧಿ ಕಾರಿಗಳ ಖಾತೆಗೆ ಜಮಾ ಆಗಿದೆ. ತಕ್ಷಣದ ಪರಿಹಾರವಾಗಿ ತಲಾ ₹ 10 ಸಾವಿರ ಕೊಡಲಾಗಿದೆ. ಮನೆ ಕಳೆದು ಕೊಂಡವರಿಗೆ ₹ 5 ಲಕ್ಷ ವೆಚ್ಚದಲ್ಲಿ ಮನೆ ಕಟ್ಟಿಸಿಕೊಡಲಾಗುತ್ತದೆ ಎಂದರು.
ಸರಳ ದಸರಾ: ‘ಕೋವಿಡ್ ಕಾರಣ ಈ ಬಾರಿ ದಸರಾ ಸರಳವಾಗಿ ಆಚರಿಸಲಾ ಗುತ್ತದೆ. ಅದಕ್ಕೆ ಬೇಕಾದ ಪೂರ್ವ ಸಿದ್ಧತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು ಮಾಡಿದ್ದಾರೆ. ಕೋವಿಡ್ ಪರಿಸ್ಥಿತಿ ಅರ್ಥ ಮಾಡಿಕೊಂಡು ಸರಳ ದಸರೆಗೆ ಎಲ್ಲರೂ ಸಹಕರಿಸಬೇಕು’ ಎಂದರು.
ಎರಡೂ ಕಡೆ ಗೆದ್ದಾಗಿದೆ: ಉಪಚುನಾವಣೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಶಿರಾ ಮತ್ತು ಆರ್.ಆರ್ ನಗರದಲ್ಲಿ ಬಿಜೆಪಿ ಈಗಾಗಲೇ ಗೆದ್ದಾಗಿದೆ. ದೊಡ್ಡ ಅಂತರದಲ್ಲಿ ಗೆಲ್ಲಬೇಕೆಂಬುದು ನಮ್ಮ ಅಪೇಕ್ಷೆ. ಎರಡೂ ಕಡೆ ಭಾರಿ ಅಂತರದ ಜಯದ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.