ನಂಜನಗೂಡು: ನಗರದಲ್ಲಿ ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಪಾದಚಾರಿ ಮಾರ್ಗದ ಜಾಗದ ಅತಿಕ್ರಮಣವನ್ನು ನಗರಸಭೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಜೆಸಿಬಿ ಯಂತ್ರ ಬಳಸಿ ತೆರವುಗೊಳಿಸಿದರು.
ನಗರದ ಬಜಾರ್ ರಸ್ತೆ, ಸಿನಿಮಾರಸ್ತೆ, ನೆಹರು ವೃತ್ತಗಳಲ್ಲಿ ವ್ಯಾಪಾರಿಗಳು ಅತಿಕ್ರಮಿಸಿಕೊಂಡಿದ್ದ ಪಾದಚಾರಿ ಮಾರ್ಗದ ಜಾಗವನ್ನು ಜೆಸಿಬಿ ಯಂತ್ರಗಳ ಮೂಲಕ ನಗರಸಭೆ ಸಿಬ್ಬಂದಿ ನಸುಕಿನಲ್ಲಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.ಸಿನಿಮಾ ರಸ್ತೆಯಲ್ಲಿ ಕೆಲವು ವ್ಯಾಪಾರಿಗಳು ಹಾಗೂ ನಗರಸಭೆ ಮುಂಭಾಗ ರಸ್ತೆಬದಿ ವ್ಯಾಪಾರಿಗಳು ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಲು ಯತ್ನಿಸಿದರೂ ಅದಕ್ಕೆ ಸೊಪ್ಪು ಹಾಕದ ನಗರಸಭೆ ಅಧಿಕಾರಿಗಳ ತಂಡ ಕಟ್ಟುನಿಟ್ಟಿನ ಕ್ರಮಕೈಗೊಂಡು, ತೆರವು ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದರು.
ನಗರದ ಬಜಾರ್ ರಸ್ತೆ ಹಾಗೂ ಸಿನಿಮಾ ರಸ್ತೆಗಳಲ್ಲಿ ದ್ವಿಚಕ್ರವಾಹನ ಸವಾರರು ಸಂಚರಿಸಲು ಪರದಾಡುವ ಸ್ಥಿತಿ ಇತ್ತು. ನಗರಸಭೆಯ ಹಳೇ ತರಕಾರಿ ಮಾರ್ಕೆಟ್ ಬಳಿ ನಗರಸಭೆಯ ಮಳಿಗೆ ಬಾಡಿಗೆದಾರರು ಮುಖ್ಯ ರಸ್ತೆಯನ್ನು ಅತಿಕ್ರಮಿಸಿಕೊಂಡಿರುವ ಬಗ್ಗೆ ಹಲವು ಬಾರಿ ದೂರುಗಳು ಬಂದಿದ್ದವು. ನಗರದ ನಾಗರಿಕರು ಫುಟ್ಪಾತ್ ಜಾಗದ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸ್ವಾಗತಿಸಿದ್ದಾರೆ.
‘ಕೋರ್ಟ್ ಆದೇಶ ಪಾಲಿಸುತ್ತಿದ್ದೇವೆ’
ನಗರಸಭೆ ಆಯುಕ್ತ ವಿಜಯ್ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ ದೇಶದಾದ್ಯಂತ ರಸ್ತೆ ಅತಿಕ್ರಮಣವನ್ನು ತೆರವುಗೊಳಿಸುವಂತೆ ಸುಪ್ರಿಂ ಕೋರ್ಟ್ ನೀಡಿರುವ ಸೂಚನೆ ಮೇರೆಗೆ ರಾಜ್ಯದಾದ್ಯಂತ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ನಗರದಲ್ಲಿ ಅತಿಕ್ರಮಣದಾರರಿಗೆ ಸ್ವಯಂಪ್ರೇರಿತವಾಗಿ ಒತ್ತುವರಿ ತೆರವುಗೊಳಿಸಿಕೊಳ್ಳುವಂತೆ ಮುನ್ನೆಚ್ಚರಿಕೆ ನೀಡಲಾಗಿತ್ತು. ತೆರವು ಕಾರ್ಯಾಚರಣೆ ನಡೆಸುವುದಾಗಿ ಮಾಹಿತಿ ಕೂಡಲಾಗಿತ್ತು. ನಗರದ ಪ್ರಮುಖ ಭಾಗಗಳಲ್ಲಿ ಯಶಸ್ವಿಯಾಗಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.