
ಹುಣಸೂರು: ಪ್ರಾದೇಶಿಕ ಅರಣ್ಯ ವಿಭಾಗಕ್ಕೆ ಸೇರಿದ ಸೊಳ್ಳೆಪುರ ಹುಲ್ಲುಗಾವಲಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದರಿಂದ ಅಂದಾಜು 40 ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಹುಣಸೆಕಟ್ಟೆ ಹಳ್ಳದ ಟಿಬೆಟ್ ಕ್ಯಾಂಪ್ ಬಳಿಯ ಅರಣ್ಯದಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ ಸ್ಥಳೀಯರ ಗಮನಕ್ಕೆ ಬಂದಿದ್ದು, ತಕ್ಷಣ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಿಂದ ಬೆಂಕಿ ಹತೋಟಿಗೆ ತರುವಲ್ಲಿ ಯಶಸ್ವಿಯಾದರು ಎಂದು ವಲಯ ಅರಣ್ಯಾಧಿಕಾರಿ ನಂದಕುಮಾರ್ ತಿಳಿಸಿದರು.
ಅವಘಡದಿಂದ ಕಳೆದ ಮೂರು ವರ್ಷಗಳ ಹಿಂದೆ ಸೊಳ್ಳೆಪುರ ಅರಣ್ಯದಲ್ಲಿ ನೆಟ್ಟಿದ್ದ ಹಣ್ಣಿನ ಗಿಡ, ಬಿದಿರು ಹಾಗೂ ಹುಲ್ಲುಗಾವಲು ಸಂಪೂರ್ಣ ಸುಟ್ಟು ಹೋಗಿದೆ. ಇದರಿಂದ ಪರಿಸರದ ಮೇಲೆ ಪರಿಣಾಮ ಬೀರಿದೆ. ಘಟನೆಯಲ್ಲಿ ಟಿಬೆಟ್ ಕ್ಯಾಂಪ್ ನಿವಾಸಿ ನಮಗೇಲ್ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಕೊಳವೆ ಬಾವಿ ಪಂಪ್ಸೆಟ್ ಸಂಪೂರ್ಣ ಸುಟ್ಟು ಕರುಕಲಾಗಿದೆ ಎಂದರು.
ಬೆಂಕಿ ಅವಘಡ ನಿಯಂತ್ರಿಸಲು ಹೊಸೂರು ಗೇಟ್ ಗ್ರಾಮದ ಅರಣ್ಯ ಸಮಿತಿ ಅಧ್ಯಕ್ಷ ಗೋವಿಂದ ಮತ್ತು ಸದಸ್ಯರು, ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಶಾಂತ್ ಸೇರಿದಂತೆ 20ಕ್ಕೂ ಹೆಚ್ಚು ಜನ ನೆರವಾದರು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.