ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಈಚೆಗೆ ಪ್ರತಿಭಟನೆ ಸಮಯದಲ್ಲಿ ‘ಫ್ರೀ ಕಾಶ್ಮೀರ’ ಫಲಕ ಹಿಡಿದ ಯುವತಿ ಬಿ.ನಳಿನಿ ಪರವಾಗಿ ವಕೀಲರು ವಕಾಲತ್ತು ವಹಿಸಬಾರದು ಎಂದು ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸಭೆ ಮಂಗಳವಾರ ನಿರ್ಣಯ ಕೈಗೊಂಡಿದೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಂಘದ ಕಾರ್ಯದರ್ಶಿ ಶಿವಪ್ಪ, ‘ಇದೊಂದು ದೇಶದ್ರೋಹದ ಪ್ರಕರಣ. ರಾಷ್ಟ್ರೀಯ ಏಕತೆಗೆ ಧಕ್ಕೆ ತರುವಂತಹ ಕೆಲಸ. ಇಂತಹ ಕೃತ್ಯದ ಪರವಾಗಿ ವಕಾಲತ್ತು ವಹಿಸುವುದು ಸರಿಯಲ್ಲ. ಹೀಗಾಗಿ, ಬಹುಮತದ ಆಧಾರದ ಮೇಲೆ ಸಭೆಯು ಈ ನಿರ್ಣಯ ಕೈಗೊಂಡಿದೆ’ ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಕೆಲವು ವಕೀಲರು ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಳ್ಳಬೇಕು ಎಂದು ಸಂಘಕ್ಕೆ ಮನವಿ ಪತ್ರ ಕೊಟ್ಟಿದ್ದರು. ಈ ಹಿಂದೆ ವಕಾಲತ್ತು ವಹಿಸಿದ್ದ ವಕೀಲ ಪೃಥ್ವಿ ಸಹ ವೈಯಕ್ತಿಕ ಕಾರಣಗಳನ್ನು ನೀಡಿ ಪ್ರಕರಣದಿಂದ ಹಿಂದೆ ಸರಿದಿದ್ದರು.
ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವುದಕ್ಕೆ ಪೊಲೀಸರು ಮಂಗಳವಾರ ಆಕ್ಷೇಪಣೆ ಸಲ್ಲಿಸಬೇಕಿದೆ. ಪ್ರಕರಣ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.