ADVERTISEMENT

ಗಣೇಶ ಚತುರ್ಥಿ: ದಸರಾ ಆನೆಗಳಿಗೆ 'ಗಜಪೂಜೆ'

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 10:34 IST
Last Updated 27 ಆಗಸ್ಟ್ 2025, 10:34 IST
   

ಮೈಸೂರು: ಅರಮನೆ ಆವರಣದಲ್ಲಿ ದಸರಾ ಆನೆಗಳಿಗೆ ಗಣೇಶ ಚತುರ್ಥಿ ಪ್ರಯುಕ್ತ ಬುಧವಾರ 'ಗಜಪೂಜೆ' ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ಡಿಸಿಎಫ್ ಐ.ಬಿ.ಪ್ರಭುಗೌಡ ನೇತೃತ್ವದಲ್ಲಿ ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಅರಮನೆ ಮಂಡಳಿ ಅಧಿಕಾರಿಗಳು, ಮಾವುತರು, ಕಾವಾಡಿಗಳು ಹಾಗೂ ಸಿಬ್ಬಂದಿ ಆನೆಗಳಿಗೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದರು.

ಅರಮನೆ ಅರ್ಚಕ ಪ್ರಹ್ಲಾದರಾವ್‌ ಆನೆಗಳಿಗೆ ಪಂಚಫಲ, ಕೋಡುಬಳೆ ಒಬ್ಬಟ್ಟು, ರವೆ ಉಂಡೆ, ಸಿಹಿಗಡುಬು, ಕರ್ಜಿಕಾಯಿ, ಲಾಡು, ಚಕ್ಕುಲಿ, ನಿಪ್ಪಟ್ಟು, ಹೋಳಿಗೆ, ಬೆಲ್ಲ, ಕಬ್ಬು, ಕಲ್ಲು ಸಕ್ಕರೆ, ಮೋದಕ ಮೊದಲಾದ 'ಗಣೇಶ'ನ ಇಷ್ಟದ ತಿನಿಸುಗಳನ್ನು ಅಣಿಗೊಳಿಸಿದರು.

ADVERTISEMENT

ಆನೆಗಳ ಹಣೆ, ಸೊಂಡಿಲು, ಪಾದಗಳಿಗೆ ಅರಿಸಿನ, ಕುಂಕುಮ ಹಾಗೂ ಗಂಧವನ್ನು ಹಚ್ಚಿ ಸೇವಂತಿಗೆ ಹೂಗಳಿಂದ ಅಲಂಕರಿಸಲಾಯಿತು‌. ಚಾಮರವನ್ನು ಬೀಸಲಾಯಿತು. ಪಂಚಫಲ- ತಿನಿಸುಗಳನ್ನು ನೈವೇದ್ಯ ನೀಡಿ ‘ಶೋಡಷೋಪಚಾರ’ ಪೂಜೆ ಮಾಡಲಾಯಿತು. ಆರತಿ ಬೆಳಗಲಾಯಿತು. ಆನೆಗಳಿಗೆ ಬಿಲ್ವಪತ್ರೆ, ಪುಷ್ಪ ನಮನ ಸಲ್ಲಿಸುತ್ತಿದ್ದಂತೆ ನೆರೆದಿದ್ದ ಎಲ್ಲರೂ ಹೂ ಮಳೆಗರೆದರು.

ಸಿಹಿ ತಿಂಡಿಗಳೊಂದಿಗೆ ಕಬ್ಬು, ಬೆಲ್ಲ, ಪಂಚಫಲಗಳನ್ನು ಆನೆಗಳಿಗೆ ತಿನ್ನಿಸಲಾಯಿತು.

ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಡಿಸಿಪಿ ಸುಂದರ್ ರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜ್, ಮಾವುತರು, ಕಾವಾಡಿಗರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.