ADVERTISEMENT

ಮೈಸೂರು: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಗ್ರಾ.ಪಂ ಸದಸ್ಯರ ಪ್ರತಿಭಟನೆ ಡಿ.26ಕ್ಕೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2022, 12:32 IST
Last Updated 31 ಜುಲೈ 2022, 12:32 IST
   

ಮೈಸೂರು: ‘ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನವನ್ನು ಡಿ.25ರ ಒಳಗೆ ಹೆಚ್ಚಿಸಬೇಕು. ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಪಾಸ್ ನೀಡಬೇಕು. ಇಲ್ಲದಿದ್ದಲ್ಲಿ ನಮ್ಮನ್ನು ಪ್ರತಿನಿಧಿಸುವ 25 ವಿಧಾನಪರಿಷತ್‌ ಸದಸ್ಯರ ನೇತೃತ್ವದಲ್ಲಿ ಡಿ.26ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು’ ಎಂದು ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಸತೀಶ್ ಕಾಡಶೆಟ್ಟಿಹಳ್ಳಿ ತಿಳಿಸಿದರು.

ಒಕ್ಕೂಟದಿಂದ ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ‘ಗ್ರಾಮ ಪಂಚಾಯಿತಿ ಸದಸ್ಯರ ಸ್ವಾಭಿಮಾನಿ ಸಮಾವೇಶ’ದಲ್ಲಿ ಅವರು ಮಾತನಾಡಿದರು.

‘ಸಂವಿಧಾನದ ಆಶಯದಂತೆ ಗ್ರಾಮ ಪಂಚಾಯಿತಿಗಳನ್ನು ಸ್ಥಳೀಯ ಸ್ವಯಂ ಸರ್ಕಾರಗಳಾಗಿ ಪರಿವರ್ತಿಸಬೇಕು. ಇದಕ್ಕಾಗಿ ಹೆಚ್ಚಿನ ಅನುದಾನ ಒದಗಿಸಬೇಕು. ನಾವೂ ಜನಪ್ರತಿನಿಧಿಗಳೇ. ಶಾಸಕರು ನಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಶಾಸಕರು ಅಥವಾ ಸಂಸದರು ಹಸ್ತಕ್ಷೇಪ ಮಾಡಬಾರದು. ನಮ್ಮನ್ನು ದುರ್ಬಲರನ್ನಾಗಿಸಬಾರದು’ ಎಂದು ಒತ್ತಾಯಿಸಿದರು.

ADVERTISEMENT

‘ಜಿ.ಪಂ ಸಿಇಒ ಹಾಗೂ ತಾ.ಪಂ ಇಒಗಳು ಮಾರ್ಕೆಟಿಂಗ್ ಏಜೆಂಟರಾಗಿದ್ದಾರೆ. ಯಾವುದೇ ಅಧಿಕೃತ ಆದೇಶಗಳಿಲ್ಲದಿದ್ದರೂ. ತಮಗೆ ಬೇಕಾದ ಕೆಲಸಗಳಿಗೆ ಗ್ರಾಮ ಪಂಚಾಯಿತಿ ಸದಸ್ಯರನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು. ಗ್ರಾಮ ಪಂಚಾಯಿತಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಶಾಖಾ ಕಚೇರಿಗಳಲ್ಲ. ಗ್ರಾ.ಪಂಗಳಿಗೆ ಸ್ವತಂತ್ರ ಅಸ್ತಿತ್ವವಿದೆ. ಅದನ್ನು ಉಳಿಸಿಕೊಂಡು ಹೋಗಲು ಗ್ರಾಮ ಸ್ವರಾಜ್‌ ಅನುಷ್ಠಾನಕ್ಕೆ ಬಲ ತುಂಬಬೇಕು’ ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.