ADVERTISEMENT

ಚುನಾವಣಾ ರಾಜಕೀಯದಿಂದ ಶಾಸಕ ಜಿ.ಟಿ.ದೇವೇಗೌಡ ನಿವೃತ್ತಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 13:35 IST
Last Updated 4 ಆಗಸ್ಟ್ 2019, 13:35 IST
ಜಿ.ಟಿ.ದೇವೇಗೌಡ
ಜಿ.ಟಿ.ದೇವೇಗೌಡ   

ಮೈಸೂರು: ಪ್ರಸಕ್ತ ರಾಜಕೀಯ ವಿದ್ಯಮಾನಗಳಿಂದ ಬೇಸತ್ತಿರುವ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಪ್ರಕಟಿಸಿದ್ದಾರೆ.

ಪಕ್ಷದ ವರಿಷ್ಠರು ತಮ್ಮನ್ನು ನಡೆಸಿಕೊಳ್ಳುತ್ತಿರುವ ರೀತಿಯೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ. ಸರ್ಕಾರದ ಪತನದ ಬಳಿಕವೂ ಅದು ಮುಂದುವರೆದಿದೆ ಎಂದು ಆಪ್ತರಲ್ಲಿ ಹೇಳಿಕೊಂಡಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ‘50 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಇವತ್ತಿನ ಪರಿಸ್ಥಿತಿಯಲ್ಲಿ ರಾಜಕೀಯ ಸಾಧ್ಯವಿಲ್ಲ. ಚುನಾವಣಾ ರಾಜಕೀಯದಿಂದ ದೂರ ಉಳಿಯಲಿದ್ದೇನೆ. ಇನ್ನೆಂದೂ ಸ್ಪರ್ಧಿಸಲ್ಲ. ನಾನು ಅನುಭವಿಸುತ್ತಿರುವ ನೋವು ನನಗೆ ಮಾತ್ರ ಗೊತ್ತು’ ಎಂದರು.

ADVERTISEMENT

‘ಎಚ್‌.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ದೇವರು ಅಂದುಕೊಂಡಿದ್ದೇನೆ. ನನ್ನ ನಿರ್ಧಾರವನ್ನು ಇಬ್ಬರಿಗೂ ತಿಳಿಸಿದ್ದೇನೆ. ಕಾರ್ಯಕರ್ತರು ನನಗೆ ತೊಂದರೆ ಕೊಟ್ಟಿಲ್ಲ. ಸಿದ್ದರಾಮಯ್ಯ ವಿರುದ್ಧ ಭಾರಿ ಅಂತರದ ಗೆಲುವು ತಂದುಕೊಟ್ಟ ಮತದಾರರಿಗೆ ಕೃತಜ್ಞತೆ ಸಲ್ಲಿಸಲೂ ಸಾಧ್ಯವಾಗಿಲ್ಲ’ ಎಂದು ನೋವು ತೋಡಿಕೊಂಡಿದ್ದಾರೆ.

‘ಯಾರ ಹಂಗಿನಲ್ಲೂ ಬದುಕಿಲ್ಲ. ನನಗೆ ಯಾರೂ ರಾಜಕೀಯ ಗುರುಗಳಿಲ್ಲ. ಯಾರಿಂದಲೂ ಒಂದೂ ಪೈಸೆ ಸಹಾಯವಾಗಿಲ್ಲ. ಕುಮಾರಪರ್ವ ಸಮಾವೇಶ ಮತ್ತು ಚುನಾವಣೆಗೆ ಪಕ್ಷದಿಂದ ಹಣ ಪಡೆದಿಲ್ಲ. ಮೈತ್ರಿ ಸರ್ಕಾರದಲ್ಲಿ ನನಗೆ ಇಷ್ಟವಾದ ಖಾತೆ ಸಿಗಲಿಲ್ಲ. ಉನ್ನತ ಶಿಕ್ಷಣ ಖಾತೆ ಬೇಡ ಎಂದು ಒಂದು ತಿಂಗಳು ದೂರ ಉಳಿದಿದ್ದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.