ಮೈಸೂರು: ‘ಟ್ಯಾಂಕ್ಗಳನ್ನು ಸ್ವಚ್ಛ ಮಾಡಿಸಿ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಪ್ರತಿ ಮನೆಗೂ ಶುದ್ಧ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ಮೈ ಮರೆತರೆ ಸುಮ್ಮನಿರುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.
‘ಕಾಡಂಚಿನ ಗ್ರಾಮಗಳಿಂದ ಪ್ರಾಣಿಗಳು ಜನರ ಮೇಲೆ ದಾಳಿ ಮಾಡುತ್ತಿವೆ. ಇದನ್ನು ತಡೆಯಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಮುಖ್ಯರಸ್ತೆಗಳಲ್ಲಿನ ದೀಪಗಳು ಕೆಟ್ಟು ಹೋಗಿದ್ದರೆ ದುರಸ್ತಿಪಡಿಸಬೇಕು. ಬೀದಿ ನಾಯಿಗಳ ಹಾವಳಿಗಳ ಬಗ್ಗೆ ಗ್ರಾಮಸ್ಥರು ದೂರು ನೀಡುತ್ತಿದ್ದಾರೆ. ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ಆಸ್ಪತ್ರೆ, ಶಾಲೆಗಳು, ಸ್ಮಶಾನಕ್ಕೆ ಸರ್ಕಾರಿ ಜಾಗಗಳನ್ನು ಗುರುತಿಸಿ ಮೀಸಲಿಡಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ಸರ್ಕಾರಿ ಜಾಗವನ್ನು ಗುರುತಿಸಿ ಖಾತೆ ಮಾಡಿಸಬೇಕು’ ಎಂದು ನಿರ್ದೇಶನ ನೀಡಿದರು.
ಸರ್ವೇ ಮಾಡಿ: ‘ಕೆಲವು ಕಡೆಗಳಲ್ಲಿ ಗೋಮಾಳದಲ್ಲಿ ಉಳುಮೆ ಮಾಡಲಾಗುತ್ತಿದ್ದು, ಅವರಿಗೆ ಹಕ್ಕುಪತ್ರ ನೀಡಿಲ್ಲ. ಎಡಿಎಲ್ಆರ್, ಡಿಡಿಎಲ್ಆರ್ಗಳು ಗೋಮಾಳ ಭೂಮಿಯನ್ನು ಸರ್ವೇ ಮಾಡಿ ದಾಖಲೆಗಳನ್ನು ಸಿದ್ಧಪಡಿಸಬೇಕು. ಗ್ರಾಮ ಪಂಚಾಯಿತಿ ವ್ಯಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡಬೇಕು. ಹೊರವಲಯದಲ್ಲಿ, ವರ್ತುಲ ರಸ್ತೆಯ ಸುತ್ತಮುತ್ತಲೂ ತ್ಯಾಜ್ಯದ ರಾಶಿ ಕಂಡುಬರುತ್ತಿದೆ. ನಿಯಮಿತವಾಗಿ ವಿಲೇವಾರಿ ಮಾಡಬೇಕು’ ಎಂದು ತಿಳಿಸಿದರು.
‘ಉದ್ಯಾನಗಳಲ್ಲಿ ಕಳೆಗಿಡಗಳು ಬೆಳೆದಿರುವುದು ಕಂಡುಬರುತ್ತಿದ್ದು, ಕೂಡಲೇ ತೆರವುಗೊಳಿಸಬೇಕು. ಮಾಲೀಕರಿಗೆ ಖಾತೆಗಳನ್ನು ಮಾಡಿಕೊಡುವ ಜೊತೆಗೆ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಬೇಕು. ಹೂಟಗಳ್ಳಿ ನಗರಸಭೆ, ಬೋಗಾದಿ, ಶ್ರೀರಾಂಪುರ, ಕಡಕೊಳ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಗಳಿಗೆ ಖಾಸಗಿ ಬಡಾವಣೆಗಳ ಹಸ್ತಾಂತರವಾದ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಆಸ್ತಿ ತೆರಿಗೆ ಪರಿಷ್ಕರಿಸಿ ಸಂಗ್ರಹ ಮಾಡುತ್ತಿರುವುದರಿಂದ ಅದಕ್ಕೆ ತಕ್ಕಂತೆ ಕ್ರಿಯಾಯೋಜನೆ ರೂಪಿಸಬೇಕು. ಕುಡಿಯುವ ನೀರು, ಯುಜಿಡಿ, ವಿದ್ಯುತ್, ಚರಂಡಿ ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸಿ ಅನುಮೋದನೆ ಪಡೆದುಕೊಳ್ಳಬೇಕು’ ಎಂದು ಹೇಳಿದರು.
‘ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆಯಾಯ ಸ್ಥಳೀಯ ಸಂಸ್ಥೆಗಳಿಗೆ ಇನ್ನೆರಡು ದಿನಗಳಲ್ಲಿ ಹಸ್ತಾಂತರ ಮಾಡಿಕೊಳ್ಳಬೇಕು’ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ಕುಮಾರ್, ‘ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅಳವಡಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ವಹಣೆ ಅವಧಿ ಮುಗಿದಿದೆ. ಪ.ಪಂ. ವ್ಯಾಪ್ತಿಯಲ್ಲಿ ಇರುವಂಥವನ್ನು ಹಸ್ತಾಂತರಕ್ಕೆ ಪತ್ರ ಬರೆಯಲಾಗಿದೆ’ ಎಂದು ತಿಳಿಸಿದರು.
ಅಧಿಕಾರಿಗಳಿಗೆ ನೋಟಿಸ್: ಪೊಲೀಸ್ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಕೆಲವು ಇಲಾಖೆ ಅಧಿಕಾರಿಗಳು ಗೈರು ಹಾಜರಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿ ವರದಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಸವಿತಾ, ತಹಶೀಲ್ದಾರ್ ಮಹೇಶ್ ಕುವಾರ್, ಸೆಸ್ಕ್ ಎಸ್ಇ ಸುನೀಲ್ಕುಮಾರ್, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ವಿ.ಪ್ರಿಯದರ್ಶಿನಿ, ತಾಪಂ ಇಒ ಕೃಷ್ಣ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.