ಮೈಸೂರು: ಕೊರೊನಾ ವೈರಸ್ ಸೋಂಕು ಹರಡದಂತೆ ಎಲ್ಲೆಡೆ ಮುನ್ನೆಚ್ಚರಿಕೆ ಕ್ರಮ ಅನುಸರಿಸುತ್ತಿದ್ದರೆ, ಮೈಸೂರು ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯೊಂದರಲ್ಲಿ ಕಾರ್ಮಿಕರು ಸುರಕ್ಷತಾ ವಚವಿಲ್ಲದೆ ಕೆಲಸದಲ್ಲಿ ತೊಡಗಿರುವುದು ಕಂಡುಬಂದಿದೆ.
ಟಿ.ನರಸೀಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದಲ್ಲಿ ಕಾರ್ಮಿಕರು ಭಾನುವಾರ ಚರಂಡಿ ಸ್ವಚ್ಛತೆಯಲ್ಲಿ ತೊಡಗಿದ್ದರು. ಆದರೆ, ಬೂಟು, ಕೈಗವಸು, ಮಾಸ್ಕ್ ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಫೋಟೊ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.
‘ಚರಂಡಿಗೆ ಇಳಿಸುವುದು ಮೊದಲನೇ ತಪ್ಪು. ಜೊತೆಗೆ ರಕ್ಷಣೆಗೆಂದು ಯಾವುದೇ ಉಪಕರಣ ನೀಡಿಲ್ಲ. ಈಗ ಕೊರೊನಾ ವೈರಸ್ನಿಂದ ಎಲ್ಲರೂ ಆತಂಕದಲ್ಲಿದ್ದಾರೆ. ಇಂಥ ಸಂದರ್ಭದಲ್ಲೂ ಪೌರಕಾರ್ಮಿಕರನ್ನು ಈ ರೀತಿ ನಡೆಸಿಕೊಳ್ಳಲಾಗುತ್ತಿದೆ’ ಎಂದು ಗ್ರಾಮದ ನಿವಾಸಿ ರಮೇಶ್ ಹೇಳಿದ್ದಾರೆ.
ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತಕುಮಾರ್, ‘ಈ ವಿಚಾರ ಗಮನಕ್ಕೆ ಬಂದಿದೆ. ಈ ಸಂಬಂಧ ವರದಿಕೊಡುವಂತೆ ಪಿಡಿಒಗೆ ಸೂಚನೆ ನೀಡಿದ್ದೇನೆ. ಮುಂದೆ ಹೀಗಾಗದಂತೆ ನೋಡಿಕೊಳ್ಳಲಾಗುವುದು’ ಎಂದರು.
‘ರಕ್ಷಣಾ ಕವಚ ನೀಡಿದ್ದರೂ ಕಾರ್ಮಿಕರು ಧರಿಸಿಕೊಂಡಿಲ್ಲ’ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸ್ಥಳೀಯ ಅಧಿಕಾರಿಗಳು ತಮ್ಮನ್ನು ರಕ್ಷಿಸಿಕೊಳ್ಳಲು ಯತ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.