ಸಾಲಿಗ್ರಾಮ: ‘ಮೈಸೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರ ಬಿಡುಗಡೆ ಮಾಡಿದ್ದ ₹ 164 ಕೋಟಿಯನ್ನು ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಿದ್ದಂತೆ ಅದನ್ನು ರದ್ದು ಮಾಡಿ ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಿಕೊಂಡಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಶಾಸಕ ಸಾ.ರಾ.ಮಹೇಶ್ ಆರೋಪ ಮಾಡಿದರು.
ಕೆ.ಆರ್.ನಗರ ತಾಲ್ಲೂಕಿನ ಚುಂಚನಕಟ್ಟೆ ಗ್ರಾಮದಲ್ಲಿ ಸೆ. 21ಮತ್ತು 22ರಂದು ನಡೆಯುವ ಜಲಪಾತೋತ್ಸವ ಕಾರ್ಯಕ್ರಮದ ಸಿದ್ಧತೆ ವೀಕ್ಷಣೆ ಹಾಗೂ ₹ 10 ಕೋಟಿ ವೆಚ್ಚದ ಪ್ರವಾಸಿ ಕೇಂದ್ರದ ವಿವಿಧ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ನಂತರ ಅವರು ಮಾತನಾಡಿದರ
‘ಮೈಸೂರು ಜಿಲ್ಲೆಯ ಪುರಸಭೆಗಳ ಅಭಿವೃದ್ಧಿಗೆ ಎಚ್.ಡಿ.ಕುಮಾರಸ್ವಾಮಿ ಅವರು ₹ 80 ಕೋಟಿ ಬಿಡುಗಡೆ ಮಾಡಿ, ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ, ಈ ಹಣವನ್ನು ಕೂಡಾ ಸಿ.ಎಂ ಅವರು ತಮ್ಮ ತವರು ಜಿಲ್ಲೆಗೆ ವರ್ಗಾವಣೆ ಮಾಡಿ ಕೊಂಡಿರುವುದು ದ್ವೇಷದ ರಾಜಕಾರಣ ಅಲ್ಲದೇ ಮತ್ತೇನು’ ಎಂದು ಪ್ರಶ್ನಿಸಿದರು.
‘ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಜೆಪಿ ನಾಯಕರು ಮೈಸೂರು ಪ್ರಾಂತ್ಯಕ್ಕೆ ಮಾತ್ರ ಸಿಮೀತವಾಗಿರುವ ಸಿ.ಎಂ ಎಂದು ಬೊಬ್ಬೆ ಹಾಕುತ್ತಿದ್ದರು. ಈಗ ಬಿ.ಎಸ್.ಯಡಿಯೂರಪ್ಪ ಎಲ್ಲಿಗೆ ಸಿಮೀತ ಎಂಬುದನ್ನು ಬಿಜೆಪಿಯವರೇ ಹೇಳಬೇಕು’ ಎಂದು ಕಿಡಿಕಾರಿದರು.
‘ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಬಿಡುಗಡೆಯಾಗಿದ್ದ ಹಣವನ್ನು ಸಿ.ಎಂ ರಾಜ್ಯದ ನೆರೆ ಸಂತ್ರಸ್ತರ ಅಭಿವೃದ್ಧಿಗೆ ಬಳಕೆ ಮಾಡಿ ಕೊಂಡಿದ್ದರೆ ನಿಜಕ್ಕೂ ಸಂತೋಷವಾಗುತ್ತಿತ್ತು’ ಎಂದರು.
ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಜನಾರ್ದನ್, ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ, ಉಪವಿಭಾಗಾಧಿಕಾರಿ ವೀಣಾ, ಹೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ತಹಶೀಲ್ದಾರ್ ಮಂಜುಳಾ, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ.ಸೋಮಶೇಖರ್, ಎಪಿಎಂಸಿ ಅಧ್ಯಕ್ಷ ಕುಪ್ಪಳ್ಳಿಸೋಮು, ಹೊಸೂರು ಕೀರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ, ಎಸ್.ಟಿ.ಕೀರ್ತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.