ADVERTISEMENT

ಮೈಸೂರು ಹಾಲು ಉತ್ಪಾದಕರ ಒಕ್ಕೂಟ: ನೇಮಕಾತಿಗೆ ಹೈಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 10:36 IST
Last Updated 10 ಜೂನ್ 2020, 10:36 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸೊಸೈಟಿಗಳ ಒಕ್ಕೂಟದಲ್ಲಿ ವಿವಿಧ ವರ್ಗಗಳ 193 ಉದ್ಯೋಗ ನೇಮಕಾತಿಗೆ ಸಂಬಂಧಿಸಿದ ಅಂತಿಮ ಆಯ್ಕೆ ಪಟ್ಟಿ‌ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶಿಸಿದೆ.

ಪ್ರತಿವಾದಿ ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸೊಸೈಟಿಗಳ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.

ADVERTISEMENT

'ತರಾತುರಿಯಲ್ಲಿ ಹುದ್ದೆಗಳ ಭರ್ತಿ ಮಾಡಲಾಗುತ್ತಿದೆ' ಎಂದು ಆರೋಪಿಸಿ ಅಂಕನಹಳ್ಳಿಯ ಡಿ. ಕೀರ್ತಿರಾಜ್ ಸೇರಿದಂತೆ 9 ಜನ ಈ ರಿಟ್ ಅರ್ಜಿ ಸಲ್ಲಿಸಿದ್ದಾರೆ.

'ಹುದ್ದೆಗಳ ನೇಮಕಕ್ಕೆ ನಡೆಸಲಾಗಿರುವ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಮೊದಲು 168 ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಏತನ್ಮಧ್ಯೆ ಹೆಚ್ಚುವರಿ 25 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಇದು ಕಾನೂನು ಬಾಹಿರ ಕ್ರಮ' ಎಂದು ಅರ್ಜಿದಾರರು ದೂರಿದ್ದಾರೆ.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಹಕಾರ ಮತ್ತು ಪಶುಸಂಗೋಪನಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಸಹಕಾರ ಸಂಘಗಳ ಮೈಸೂರು ವಿಭಾಗದ ಜಂಟಿ ಕಾರ್ಯದರ್ಶಿಗಳಿಗೂ ನೋಟಿಸ್ ಜಾರಿಗೆ ಆದೇಶಿಸಲಾಗಿದೆ. ಅರ್ಜಿದಾರರ ಪರ ಹಿರಿಯ ವಕೀಲ ಡಿ.ಎನ್. ನಂಜುಂಡ ರೆಡ್ಡಿ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.