ADVERTISEMENT

ಚಾಮುಂಡಿ ಬೆಟ್ಟದಲ್ಲಿ ಶಾಶ್ವತ ನಿರ್ಮಾಣ ಸಲ್ಲ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 13:59 IST
Last Updated 15 ಜನವರಿ 2026, 13:59 IST
ಮೈಸೂರಿನ ಚಾಮುಂಡಿ ಬೆಟ್ಟ
ಮೈಸೂರಿನ ಚಾಮುಂಡಿ ಬೆಟ್ಟ   

ಬೆಂಗಳೂರು: ‘ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡಬಾರದು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

‘ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ‘ ರಚನೆಯ ಸಿಂಧುತ್ವ ಪ್ರಶ್ನಿಸಿ ಮೈಸೂರು ರಾಜಮನೆತನದ ಪ್ರಮೋದಾ ದೇವಿ ಒಡೆಯರ್‌ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಮಧ್ಯಂತರ ಆದೇಶ ನೀಡಿದೆ.

ವಿಚಾರಣೆ ವೇಳೆ ಪ್ರಮೋದಾ ದೇವಿ ಪರ ಪದಾಂಕಿತ ಹಿರಿಯ ವಕೀಲ ಜೆ.ಸಾಯಿ ದೀಪಕ್‌, ‘ದೇವಾಲಯದ ಆಸ್ತಿ ಮಾಲಿಕತ್ವ ವಿವಾದವು ಇದೇ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ. ಏತನ್ಮಧ್ಯೆ, ರಾಜ್ಯ ಸರ್ಕಾರ ಶಾಸನದ ಮೂಲಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ತಂದಿದೆ. ಈ ಪ್ರಾಧಿಕಾರವು ಅರ್ಜಿದಾರರಿಗೆ ಯಾವುದೇ ಸಭೆಯ ನೋಟಿಸ್‌ಗಳನ್ನು ನೀಡುತ್ತಿಲ್ಲ ಮತ್ತು ದೇವಾಲಯದ ಆವರಣದಲ್ಲಿ ಕೆಲವು ಶಾಶ್ವತ ನಿರ್ಮಾಣಗಳ ಕಾಮಗಾರಿ ನಡೆಸುತ್ತಿದೆ’ ಎಂದು ದೂರಿದರು.

ADVERTISEMENT

ಇದಕ್ಕೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎನ್‌.ದೇವದಾಸ್‌ (ಎಎಜಿ), ‘ಕೇಂದ್ರ ಸರ್ಕಾರದ ಪ್ರಸಾದ್‌ ಯೋಜನೆಯಡಿ ಚಾಮುಂಡಿ ಬೆಟ್ಟದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ದೇವಾಲಯದ ಆವರಣದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಡೆಸುವುದಿಲ್ಲ. ಬೇಸಿಗೆ ಸಮೀಪಿಸುತ್ತಿರುವ ಕಾರಣ ಭಕ್ತರ ಹಿತದೃಷ್ಟಿಯಿಂದ ತಂಗುದಾಣ ನಿರ್ಮಿಸಲಾಗುತ್ತಿದೆ’ ಎಂದು ವಿವರಿಸಿದರು.

ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಮುಂದಿನ ವಿಚಾರಣೆಯ ದಿನಾಂಕದೊಳಗಾಗಿ ಪ್ರಸಾದ್ ಯೋಜನೆ ಅಡಿಯಲ್ಲಿ ಕೈಗೊಳ್ಳುತ್ತಿರುವ ಕಾಮಗಾರಿ ಮತ್ತು ಯೋಜನೆಯ ಅನುಷ್ಠಾನದ ವಿಧಾನದ ವಿವರಗಳನ್ನು ಕೋರ್ಟ್‌ಗೆ ಹಾಜರುಪಡಿಸಬೇಕು’ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿತು.

ಹೈಕೋರ್ಟ್ ಹಾಗೂ ನ್ಯಾ. ನಾಗಪ್ರಸನ್ನ

ಅಂತೆಯೇ, ‘ಕೇಂದ್ರ ಸರ್ಕಾರದ ಯೋಜನೆಯಡಿ ಯಾವ ರೀತಿಯ ಕಾಮಗಾರಿಗಳಿಗೆ ಅವಕಾಶವಿದೆ ಎಂಬುದನ್ನು ತಿಳಿಸಿ’ ಎಂದು ಉಭಯ ಸರ್ಕಾರಗಳಿಗೆ ನಿರ್ದೇಶಿಸಿ ವಿಚಾರಣೆಯನ್ನು ಫೆಬ್ರುವರಿ 13ಕ್ಕೆ ಮುಂದೂಡಿತು.

ಕೇಂದ್ರ ಪ್ರವಾಸೋದ್ಯಮ ಸಚಿವಾಲಯವನ್ನೂ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಬೇಕೆಂಬ ಮಧ್ಯಂತರ ಅರ್ಜಿ ಸ್ವೀಕರಿಸಿದ ನ್ಯಾಯಪೀಠ ಡೆಪ್ಯುಟಿ ಸಾಲಿಸಿಟರ್‌ ಜನರಲ್‌ ಎಚ್‌.ಶಾಂತಿಭೂಷಣ್‌ ಅವರಿಗೆ ನೋಟಿಸ್ ಪಡೆಯಲು ಸೂಚಿಸಿತು.

ಕೋರಿಕೆ ಏನು?:

‘ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ-2024 ಸಂವಿಧಾನದ 13, 25, 26 ಮತ್ತು 29ನೇ ವಿಧಿಗಳ ಉಲ್ಲಂಘನೆ. ಈ ಕಾಯ್ದೆಯನ್ನು ಏಕಪಕ್ಷೀಯವಾಗಿ ರೂಪಿಸಲಾಗಿದ್ದು ತಾರತಮ್ಯದಿಂದ ಕೂಡಿದೆ. ಆದ್ದರಿಂದ, ಇದನ್ನು ಅಸಿಂಧುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.