ADVERTISEMENT

ರಾಜೇಂದ್ರಸಿಂಗ್‌ ಬಾಬು ಸೇರಿ ಮೂವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 3 ಜನವರಿ 2026, 11:52 IST
Last Updated 3 ಜನವರಿ 2026, 11:52 IST
ಎಸ್.ವಿ. ರಾಜೇಂದ್ರಸಿಂಗ್‌ ಬಾಬು
ಎಸ್.ವಿ. ರಾಜೇಂದ್ರಸಿಂಗ್‌ ಬಾಬು   

ಮೈಸೂರು: ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಎಸ್‌.ವಿ. ರಾಜೇಂದ್ರಸಿಂಗ್‌ ಬಾಬು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್‌ ಭಟ್ ಮತ್ತು ಗ್ಲೋಬಲ್‌ ಎಜುಕೇಷನ್‌ ಟ್ರಸ್ಟ್‌ ಅಧ್ಯಕ್ಷ ಪಿ.ಜಯಚಂದ್ರರಾಜು ಅವರನ್ನು ಮೈಸೂರು ವಿಶ್ವವಿದ್ಯಾಲಯದಿಂದ ನೀಡಲಾಗುವ ಗೌರವ ಡಾಕ್ಟರೇಟ್‌ ಪದವಿಗೆ ಆಯ್ಕೆ ಮಾಡಲಾಗಿದೆ.

‘ಜ.5ರಂದು ಬೆಳಿಗ್ಗೆ 11.30ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯುವ 106ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು’ ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್‌ ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅಧ್ಯಕ್ಷತೆ ವಹಿಸುವರು. ‘ಇಸ್ರೊ’ ಮಾಜಿ ಅಧ್ಯಕ್ಷ ಎಸ್.ಸೋಮನಾಥ್‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್‌ ಉಪಸ್ಥಿತರಿರುವರು’ ಎಂದು ತಿಳಿಸಿದರು.

ADVERTISEMENT

‘ಗೌರವ ಡಾಕ್ಟರೇಟ್‌ ಪದವಿಗೆ ಪರಿಗಣಿಸುವಂತೆ ವಿವಿಧ ಕ್ಷೇತ್ರದ 26 ಮಂದಿಯ ಹೆಸರನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.