ಕೆ.ಆರ್.ನಗರ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಮತ್ತು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಮುನಿಸಿನಿಂದ ಕುರುಬ ಸಮಾಜದ ಅಭಿವೃದ್ಧಿಗೆ ತೊಡಕಾಗುವ ಲಕ್ಷಣಗಳು ಕಾಣಿಸುತ್ತಿವೆ ಎಂದು ತಿಂಥಣಿ ಮಠದ ಸಿದ್ದರಾಮನಂದಪುರಿ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.
ಇಲ್ಲಿನ ಕಾಗಿನೆಲೆ ಕನಕಗುರು ಪೀಠದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
ಎಚ್.ವಿಶ್ವನಾಥ್ ಹಾಗೂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಮಾಜದ ಅಭಿವೃದ್ಧಿಗೆ ಒಂದಾಗಬೇಕು ಎಂದು ಮನವಿ ಮಾಡಿದರು.
ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ದೊಡ್ಡಸ್ವಾಮೇಗೌಡ ಮಾತನಾಡಿ, ‘ಸ್ವಾಮೀಜಿಗಳನ್ನು ನಿಯಂತ್ರಿಸುವುದರಿಂದ ಮಠ ಹಾಗೂ ಸಮಾಜದ ಅಭಿವೃದ್ಧಿಗೆ ಹಿನ್ನಡೆ ಉಂಟಾಗುತ್ತದೆ. ಸ್ವಾಮೀಜಿಗಳು ಸಮುದಾಯದ ಸಂಘಟನೆ, ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬೇಕು’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನಕಗುರು ಪೀಠದ ಶಿವಾನಂದಪುರಿ, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಸಿದ್ದೇಗೌಡ, ಜಿ.ಪಂ ಮಾಜಿ ಸದಸ್ಯ ಜಿ.ಆರ್.ರಾಮೇಗೌಡ, ಮೈಸೂರು ತಾಲ್ಲೂಕು ಕುರುಬರ ಸಂಘದ ಉಪಾಧ್ಯಕ್ಷ ರವಿ, ಕಾರ್ಯದರ್ಶಿ ಬಸವರಾಜು, ಚಾಮರಾಜನಗರ ಕುರುಬರ ಸಂಘದ ಕಾರ್ಯದರ್ಶಿ ರಾಜಶೇಖರ್, ತಾ.ಪಂ ಮಾಜಿ ಸದಸ್ಯ ನಾಗರಾಜು, ಮುಖಂಡರಾದ ಹಿನಕಲ್ ಪಾಪಣ್ಣ, ಕೃಷ್ಣಮೂರ್ತಿ, ರೇವಣ್ಣ, ಅಣ್ಣಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.