ADVERTISEMENT

ಮಳೆಯ ನಡುವೆ ನಗರದಲ್ಲಿ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ವೇತನ ಏರಿಕೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 16:12 IST
Last Updated 7 ಆಗಸ್ಟ್ 2020, 16:12 IST
ಮೈಸೂರಿನ ಕುರಿಮಂಡಿ ಸಮೀಪ ವಾಸ ಇರುವ 80ಕ್ಕೂ ಹೆಚ್ಚು ಕುಟುಂಬಗಳಿಗೆ ವಾಸಿಸಲು ಮನೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬುದ್ಧವಾದ) ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು
ಮೈಸೂರಿನ ಕುರಿಮಂಡಿ ಸಮೀಪ ವಾಸ ಇರುವ 80ಕ್ಕೂ ಹೆಚ್ಚು ಕುಟುಂಬಗಳಿಗೆ ವಾಸಿಸಲು ಮನೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬುದ್ಧವಾದ) ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು   

ಮೈಸೂರು: ನಗರದಲ್ಲಿ ಶುಕ್ರವಾರ ಸುರಿಯುತ್ತಿದ್ದ ಮಳೆಯ ನಡುವೆಯೇ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಒಟ್ಟು ಮೂರು ಪ್ರತಿಭಟನೆಗಳು ನಡೆದವು.

ಕಳೆದ ವರ್ಷ ಕ‍ಪಿಲಾ ನದಿ ಪ್ರವಾಹದಿಂದ ಸಂತ್ರಸ್ತರಾದವರಿಗೆ ಮನೆ ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸರಗೂರು ತಾಲ್ಲೂಕಿನ ಬಿದರಹಳ್ಳಿ ವೃತ್ತದಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದವು. ಕೆಲ ದಿನಗಳ ಮಟ್ಟಿಗೆ ಇವರು ಪರಿಹಾರ ಕೇಂದ್ರಗಳಲ್ಲಿ ಇದ್ದರು. ಮನೆಯೊಳಗೆ ನೀರು ನುಗ್ಗಿದ್ದರಿಂದ ಶಿಥಿಲಗೊಂಡಿವೆ. ಇಷ್ಟು ದಿನ ಹೇಗೋ ಅದೇ ಮನೆಗಳಲ್ಲಿ ಇವರು ಬದುಕು ಸಾಗಿಸುತ್ತಿದ್ದಾರೆರೆ. ಈಗ ಮನೆಗಳು ಕುಸಿಯುವ ಹಂತ ತಲುಪಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.‌

ADVERTISEMENT

ಕಪಿಲೇಶ್ವರ ಕಾಲೊನಿಯಲ್ಲಿ ಪ್ರಾರಂಭಗೊಂಡಿರುವ 43 ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕು, ಶಿಥಿಲಗೊಂಡ ಮನೆಯಲ್ಲಿ ವಾಸಿಸುವವರಿಗಾಗಿ ತಾತ್ಕಾಲಿಕ ಪರಿಹಾರ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್‌ಮೇಟಿ, ಮುಖಂಡರಾದ ಪಿ.ಎಸ್.ಸಂಧ್ಯಾ, ಎಸ್.ಎಚ್.ಹರೀಶ್, ಪುಟ್ಟರಾಜು, ಸುನಿಲ್, ಪದ್ಮಾ, ರಂಗನಾಥ್ ಹಾಗೂ ಇತರರು ಇದ್ದರು.

ವೇತನ ಏರಿಕೆಗೆ ಒತ್ತಾಯ

ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರಿಗೆ ವೇತನ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಎಐಟಿಯುಸಿ, ಅಂಗನವಾಡಿ– ಬಿಸಿಯೂಟ ಆಶಾ ಸಂಘಟನೆಗಳ ಜಂಟಿ ಸಮಿತಿ, ಜೆಸಿಟಿಯು ನೇತೃತ್ವದಲ್ಲಿ ಕಾರ್ಯಕರ್ತರು ಆಗ್ರಹಿಸಿದರು.

ಸ್ಕೀಮ್‌ ವರ್ಕರ್‌ಗಳನ್ನು ಕಾಯಂ ಕಾರ್ಮಿಕರೆಂದು ಪರಿಗಣಿಸಬೇಕು, ಮಾಸಿಕ ಕನಿಷ್ಠ ₹ 21 ಸಾವಿರ ವೇತನ ನೀಡಬೇಕು, ಮಾಸಿಕ ₹ 10 ಸಾವಿರ ಪಿಂಚಣಿ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಮೂಲಸೌಕರ್ಯಕ್ಕೆ ಆಗ್ರಹ

ಮೈಸೂರಿನ ಕುರಿಮಂಡಿ ಸಮೀಪ ವಾಸ ಇರುವ 80ಕ್ಕೂ ಹೆಚ್ಚು ಕುಟುಂಬಗಳಿಗೆ ವಾಸಿಸಲು ಮನೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬುದ್ಧವಾದ) ಕಾರ್ಯಕರ್ತರು ಒತ್ತಾಯಿಸಿದರು.

ಇವರು ಗುಡಿಸಲಿನಲ್ಲಿ ವಾಸಿಸುತ್ತಿದ್ದಾರೆ. ಕುಡಿಯಲು ಶುದ್ಧ ನೀರಿನ ವ್ಯವಸ್ಥೆ ಇರುವುದಿಲ್ಲ. 20 ವರ್ಷಗಳಿಂದಲೂ ಇವರು ಪರಿತಪಿಸುತ್ತಿದ್ದಾರೆ. ಹೀಗಾಗಿ, ಮೂಲಸೌಕರ್ಯ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ನಿಂಗರಾಜ್ ಮಲ್ಲಾಡಿ, ಎಚ್.ಬಿ.ದಿವಾಕರ್, ಕೆ.ನಂಜಪ್ಪ, ಬಲ್ಲೇನಹಳ್ಳಿ ಕೆಂಪರಾಜು, ಶ್ರೀಧರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.