ADVERTISEMENT

ನಾಟಕದಲ್ಲಿ ಸಿದ್ದರಾಮಯ್ಯ ಅವಹೇಳನ: ಆಕ್ರೋಶ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2022, 19:22 IST
Last Updated 31 ಡಿಸೆಂಬರ್ 2022, 19:22 IST
ರಂಗಾಯಣದಲ್ಲಿ ನಾಟಕ ಪ್ರದರ್ಶನ
ರಂಗಾಯಣದಲ್ಲಿ ನಾಟಕ ಪ್ರದರ್ಶನ   

ಮೈಸೂರು: ‘ಇಲ್ಲಿನ ರಂಗಾಯಣದಲ್ಲಿ ನಾಟಕ ಪ್ರದರ್ಶನದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಲಾಗಿದೆ’ ಎಂದು ಆರೋಪಿಸಿ ಪ್ರೇಕ್ಷಕರೊಬ್ಬರು ಶನಿವಾರ ಪ್ರತಿಭಟನೆ ನಡೆಸಿದರು.

ರಂಗಾಯಣದ ಭೂಮಿಗೀತದಲ್ಲಿ ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕವನ್ನು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ಸಂಸ್ಥೆಯ ‘ನಾಗರತ್ನಮ್ಮ’ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ಪ್ರದರ್ಶಿಸುತ್ತಿದ್ದರು. ಪ್ರೇಕ್ಷಕ ಮೋಹನ್‌ ಪ್ರದರ್ಶನದ ವೇಳೆಯೇ ಎದ್ದು ನಿಂತು ಆಕ್ರೋಶ ವ್ಯಕ್ತಪಡಿಸಿದರು.

‘ಭಾಗ್ಯಗಳನ್ನು ನೀಡಿ ಸೋಮಾರಿ ಮಾಡುತ್ತಿದ್ದೀರಿ, ಬರೀ ನಿದ್ದೆ ಮಾಡುತ್ತಿದ್ದೀರಿ ಎಂದೆಲ್ಲ ಹೇಳಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡುತ್ತಿದ್ದೀರಿ. ಮೂಲ ನಾಟಕದಲ್ಲಿ ಹೀಗಿದೆಯೇ? ದುರುದ್ದೇಶಪೂರ್ವಕವಾಗಿ ನಾಟಕ ರೂಪಿಸಿದ್ದೀರಿ’ ಎಂದು ವೇದಿಕೆಗೇರಿ ಕಿಡಿಕಾರಿದರು.

ADVERTISEMENT

ಸಿದ್ದರಾಮಯ್ಯ ಅಭಿಮಾನಿಗಳು, ಕುರುಬರ ಸಂಘದ ಬಿ.ಸುಬ್ರಹ್ಮಣ್ಯ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ನಿರ್ದೇಶಕ ಕಾರ್ತಿಕ್‌ ಉಪಮನ್ಯು ಕ್ಷಮೆ ಕೋರಿದರೂ, ಪ್ರತಿಭಟನಾಕಾರರು ಸ್ಥಳದಲ್ಲಿಯೇ ಕುಳಿತರು. ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಆಗಮಿಸಿ ಪ್ರತಿಭಟನಕಾರರನ್ನು ಮನವೊಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.