ADVERTISEMENT

‘ಮುಖ್ಯಮಂತ್ರಿ ಬದಲಾವಣೆಗೆ ಸೂಕ್ತ ಸಮಯವಲ್ಲ’: ಶಾಸಕ ಸಾ.ರಾ.ಮಹೇಶ್‌ ಹೇಳಿಕೆ

ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 8:42 IST
Last Updated 22 ಜುಲೈ 2021, 8:42 IST
ಸಾ.ರಾ.ಮಹೇಶ್
ಸಾ.ರಾ.ಮಹೇಶ್   

ಮೈಸೂರು: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಗೆ ಇದು ಸೂಕ್ತ ಸಮಯವಲ್ಲ’ ಎಂದು ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಗುರುವಾರ ಇಲ್ಲಿ ತಿಳಿಸಿದರು.

ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾಯಿಸುವುದು ಬಿಜೆಪಿಯ ತೀರ್ಮಾನ. ಆದರೆ ಕೋವಿಡ್‌ನ ಈ ಸಂದರ್ಭದಲ್ಲಿ ನಾಯಕತ್ವ ಬದಲಿಸುವುದು ಸೂಕ್ತವಲ್ಲ ಎಂಬುದು ನನ್ನ ವೈಯಕ್ತಿಕ ಅನಿಸಿಕೆ’ ಎಂದು ಶಾಸಕರು ಹೇಳಿದರು.

‘ಕೆಲವರು ಮಠಾಧೀಶರ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಠಾಧೀಶರು ಬಹಿರಂಗವಾಗಿಯೇ ರಾಜಕಾರಣಿಗಳನ್ನು ಬೆಂಬಲಿಸುವುದು ಹೊಸದೇನಲ್ಲ. ವಿಶ್ವಾಸ ಇದ್ದವರ ಬೆನ್ನಿಗೆ ನಿಲ್ಲುತ್ತಾರೆ’ ಎಂದು ಪ್ರಶ್ನೆಯೊಂದಕ್ಕೆ ಪ‍್ರತಿಕ್ರಿಯಿಸಿದ ಸಾ.ರಾ.ಮಹೇಶ್‌, ಸ್ವಾಮೀಜಿಗಳ ನಿಲುವನ್ನು ಸಮರ್ಥಿಸಿಕೊಂಡರು.

ADVERTISEMENT

‘ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಣ್ಣ ಆರೋಪವೂ ಇರಲಿಲ್ಲ. ರೈತರ ಸಾಲವನ್ನು ಮನ್ನಾ ಮಾಡಿದ್ದರು. ಆದರೂ ಸಮ್ಮಿಶ್ರ ಸರ್ಕಾರ ಪತನದ ಸಂದರ್ಭ ಯಾರೊಬ್ಬರೂ ಎಚ್‌ಡಿಕೆ ಬೆನ್ನಿಗೆ ನಿಲ್ಲಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ ಶಾಸಕರು, ‘2023ಕ್ಕೆ ಪ್ರಾದೇಶಿಕ ಪಕ್ಷ ಜೆಡಿಎಸ್‌ ಬಲವರ್ಧನೆಯೇ ನಮ್ಮ ಗುರಿ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.