ಮೈಸೂರು: ಜೆಡಿಎಸ್ ಮುಖಂಡರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕಾರ್ಯಕರ್ತರು ಜೈಕಾರ ಹಾಕಿದರು.
ಸಚಿವ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯುತ್ತಿದ್ದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಮಾತನಾಡಿ, '10 ತಿಂಗಳ ಹಿಂದೆ ನಡೆದ ವಿಧಾನಸಭೆಯ ಚುನಾವಣೆಗೂ ಇಂದಿಗೂ ಸಾಕಷ್ಟು ಬದಲಾವಣೆಯಾಗಿದೆ. ಆಗ ನೀವೆಲ್ಲರೂ ಜೆಡಿಎಸ್ ಅಭ್ಯರ್ಥಿಗಳ ಪರ ಕೆಲಸ ಮಾಡಿ ಸಾಕಷ್ಟು ನೋವು ಅನುಭವಿಸಿದ್ದಿರಿ. ಈಗ ಲೋಕ ಸಭಾ ಚುನಾವಣೆಗೆ ಒಪ್ಪಂದವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿರಿ' ಎಂದು ಮನವಿ ಮಾಡಿದರು.
ಇದರಿಂದ ಸಭೆಯಲ್ಲಿ ಸೇರಿದ್ದ ಕಾರ್ಯಕರ್ತರು ಕೆಂಡಾಮಂಡಲವಾದರು. ‘10 ತಿಂಗಳ ಹಿಂದೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪರ ಕೆಲಸ ಮಾಡಿ ಪೊಲೀಸ್ ಸ್ಟೇಷನ್, ಕೋರ್ಟ್ ಮೆಟ್ಟಿಲು ಹತ್ತಿದ್ದೇವೆ. ಈಗ ನೀವು ನಾಯಕರು ಒಪ್ಪಂದ ಮಾಡಿಕೊಂಡು ಬಂದರೆ ನಾವೀಗ ವೋಟ್ ಹಾಕಬೇಕೆ, ಕೆಲಸ ಮಾಡಬೇಕೆ' ಎಂದು ಏರುದನಿಯಲ್ಲಿ ಪ್ರಶ್ನಿಸಿದರು.
‘ನರೇಂದ್ರ ಮೋದಿಗೆ ಜೈ’ಎಂದು ಕೂಗುವ ಮೂಲಕ ಗದ್ದಲ ಹೆಚ್ಚುವಂತೆ ಮಾಡಿದರು.
ಬಳಿಕ ಜಿ.ಟಿ.ದೇವೇಗೌಡ ಅವರು ಕಾರ್ಯಕರ್ತರ ಬಳಿ ಬಂದು ಸಮಾಧಾನಗೊಳಿಸಿದರು. ಬಳಿಕ 'ಜೆಡಿಎಸ್ ಪಕ್ಷಕ್ಕೆ ಜೈ' ಎಂದು ಹೇಳಿಸುವ ಮೂಲಕ ಅಸಮಾಧಾನ ಶಮನಗೊಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.