ಮೈಸೂರು: ಇಲ್ಲಿನ ಜೆ.ಪಿ.ನಗರದ ಬಾಲಗಂಗಾಧರನಾಥಸ್ವಾಮಿ ಉದ್ಯಾನದ ಹಿಂಭಾಗದ ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹದೇವಮ್ಮ (48) ಎಂಬುವವರ ಕುತ್ತಿಗೆಯಲ್ಲಿದ್ದ 70 ಗ್ರಾಂ ತೂಕದ ಚಿನ್ನದ ಸರವನ್ನು ಬೈಕ್ನಲ್ಲಿ ಬಂದ ಇಬ್ಬರು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕರ ಕಚೇರಿಯ ಸಮೀಪ ಹಲ್ಲೆ?
ಮೈಸೂರು: ಶಾಸಕ ರಾಮದಾಸ್ ಅವರ ಕಚೇರಿ ಸಮೀಪ ಅವರ ಬೆಂಬಲಿಗರು ಹೇಳಿಕೊಂಡ ಕೆಲವು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎಂದು ವಿಶ್ವನಾಥ್ ಎಂಬುವವರು ಇಲ್ಲಿನ ಕೆ.ಆರ್.ಠಾಣೆಗೆ ದೂರು ನೀಡಿದ್ದಾರೆ.
ಸರ್ವೇ ನಂಬರ್ 4ಕ್ಕೆ ಸಂಬಂಧಿಸಿದಂತೆ ನೀಡಿದ್ದ ಮನವಿ ಕುರಿತು ವಿಚಾರಿಸಲು ಹೋದಾಗ ಶಂಭು ಹಾಗೂ ಅವರ ಸಂಗಡಿಗರು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಹಲ್ಲೆಗೊಳಗಾದ ವಿಶ್ವನಾಥ್ಗೆ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ದೂರು ಸ್ವೀಕರಿಸಿರುವ ಪೊಲೀಸರು ಎನ್ಸಿಆರ್ ನೀಡಿದ್ದಾರೆ. ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆ
ಮೈಸೂರು: ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಎಫ್ಡಿಸಿ ಲಕ್ಷ್ಮೀ (28) ಅವರು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.
ಬುಧವಾರ ಬೆಳಿಗ್ಗೆ ಕೆಲಸಕ್ಕೆ ತೆರಳದೇ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.