
ಉಮಾದೇವಿ
ಮೈಸೂರು: ‘ಸಮಾಜಕ್ಕೆ ಜೆಎಸ್ಎಸ್ ಮಹಾವಿದ್ಯಾಪೀಠದ ಕೊಡುಗೆ ಅಪಾರವಾಗಿದೆ’ ಎಂದು ಶಿವಮೊಗ್ಗದ ಪಿಇಎಸ್ ಟ್ರಸ್ಟ್ ಸಿಇಒ ಎಸ್.ವೈ. ಉಮಾದೇವಿ ಹೇಳಿದರು.
ಇಲ್ಲಿನ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಹಿರಿಯ ವಿದ್ಯಾರ್ಥಿನಿಯರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
‘ಜೆಎಸ್ಎಸ್ ಶಿಕ್ಷಣ ಸಂಸ್ಥೆ ಅಕ್ಷರ ಮತ್ತು ಅನ್ನ ದಾಸೋಹದ ಮೂಲಕ ಸಮಾಜವನ್ನು ಮೇಲೆತ್ತುವ ಕೆಲಸ ಮಾಡುತ್ತಿದೆ. ಹೆಣ್ಣು ಮಕ್ಕಳಿಗೆ ವಸತಿನಿಲಯ ಸೌಲಭ್ಯ ಕಲ್ಪಿಸುವ ಜೊತೆಗೆ ವಿದ್ಯಾವಂತರಾಗಲು ಕಾಲೇಜು ಶ್ರಮಿಸುತ್ತಿದೆ. ವಿದ್ಯಾರ್ಥಿನಿಯರು ಗುರುತರ ಸ್ಥಾನ ಹೊಂದಲು ಸಹಕಾರಿಯಾಗಿದೆ’ ಎಂದರು.
ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ‘ರಾಜೇಂದ್ರ ಸ್ವಾಮೀಜಿ ಮಹಿಳಾ ಸಬಲೀಕರಣಕ್ಕೆ ಮಹತ್ತರವಾದ ಕೊಡುಗೆಗಳನ್ನು ನೀಡಿದ್ದಾರೆ. ಮಹಿಳೆಯರು ಶಿಕ್ಷಿತರಾದರೆ ಸಮಾಜವು ಶಿಕ್ಷಿತವಾದಂತೆಯೇ’ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಧ್ಯಾಪಕಿ ಎಚ್.ಎಂ. ಕಲಾಶ್ರೀ, ವಕೀಲೆ ಸುಮನಾ ಎಂ.ಎನ್., ಕೆಎಎಸ್ ಅಧಿಕಾರಿ ಸುಷ್ಮಾ ಜೆ.ಪಿ., ‘ಪವರ್ ಟಿವಿ’ ನಿರೂಪಕರ ವಿಭಾಗದ ಮುಖ್ಯಸ್ಥೆ ಸಿಂಧೂರ ಗಂಗಾಧರ, ಪ್ರಾಚಾರ್ಯ ರೇಚಣ್ಣ ಮಾತನಾಡಿದರು.
ಕನ್ನಡ ವಿಭಾಗದ ಮುಖ್ಯಸ್ಥ ಆರ್.ಎಸ್. ಕುಮಾರ್, ಭೌತವಿಜ್ಞಾನ ವಿಭಾಗದ ಮುಖ್ಯಸ್ಥೆ ಸೌಮ್ಯಾ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪುಷ್ಪಲತಾ ಜೆ. ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.