ಮೈಸೂರು: ಜೆಎಸ್ಎಸ್ ಮಹಾವಿದ್ಯಾಪೀಠದಿಂದ ಬೋಗಾದಿಯ ಬಾಪೂಜಿ ಬಡಾವಣೆಯಲ್ಲಿ ಹೆಣ್ಣು ಮಕ್ಕಳಿಗಾಗಿ ನಿರ್ಮಿಸಿರುವ ಪದವಿ ಪೂರ್ವ ಕಾಲೇಜಿನ ಉದ್ಘಾಟನೆ ಸಮಾರಂಭವನ್ನು ಜುಲೈ 29ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಪ್ರತಾಪ ಸಿಂಹ ಹಾಗೂ ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
‘1,600 ಚದರ ಮೀಟರ್ ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ತರಗತಿ ಕೊಠಡಿಗಳು, ಪ್ರಯೋಗಾಲಯ, ಗ್ರಂಥಾಲಯ, ಆಡಳಿತ ಕಛೇರಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರ ನಿರೀಕ್ಷಣಾ ಕೊಠಡಿ ಮೊದಲಾದ ಸೌಲಭ್ಯಗಳಿವೆ. ಅವಶ್ಯ ಪಾಠೋಪಕರಣಗಳು ಹಾಗೂ ಪೀಠೋಪಕರಣಗಳೊಂದಿಗೆ ಕಾಲೇಜನ್ನು ಸುಸಜ್ಜಿತಗೊಳಿಸಲಾಗಿದೆ. ಈ ಶೈಕ್ಷಣಿಕ ವರ್ಷದಲ್ಲಿಯೇ ಕಾಲೇಜು ಪ್ರಾರಂಭಿಸಲು ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಅನುಮತಿ ದೊರೆತಿದೆ. ಆಸಕ್ತ ವಿದ್ಯಾರ್ಥಿಗಳು ಪ್ರಥಮ ಪಿಯು ವಿಜ್ಞಾನ ವಿಭಾಗಕ್ಕೆ ಪ್ರವೇಶಾತಿ ಪಡೆದುಕೊಳ್ಳಬಹುದಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.