ಮೈಸೂರು: ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಜಿಲ್ಲೆಯ ವರುಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ತಂದೆ ಸಿದ್ದರಾಮಯ್ಯ ಅವರ ಪರವಾಗಿ ಪುತ್ರ, ಹಾಲಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.
ಹಳ್ಳಿಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಬೆಂಬಲ ಯಾಚಿಸುತ್ತಿದ್ದಾರೆ. ಪಕ್ಷದಿಂದ ನೀಡಲಾಗಿರುವ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಮತ ಕೇಳುತ್ತಿದ್ದಾರೆ. ಇದರೊಂದಿಗೆ, ಪ್ರಚಾರದಲ್ಲಿ ಕಾಂಗ್ರೆಸ್ ಮುಂದಿದೆ.
ಯತೀಂದ್ರ, ಸೋಮವಾರ ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲ್ಲೂಕಿನ ಎಸ್.ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯವನ್ನು ನಡೆಸಿದರು. ಅವರನ್ನು ಅಭಿಮಾನಿಗಳು ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮಾಡುವ ಮೂಲಕ ಸ್ವಾಗತಿಸಿದರು. ನಂತರ ಗುಡುಮಾದನಹಳ್ಳಿ, ಮರಸೆ, ಮಾಕನಹುಂಡಿ, ಕೋಚನಹಳ್ಳಿ ಗ್ರಾಮಗಳಲ್ಲಿ ತಂದೆ ಪರವಾಗಿ ಮತ ಯಾಚಿಸಿದರು.
ಜೆಡಿಎಸ್ನಿಂದ ಅಭಿಷೇಕ್ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು, ಅವರಿನ್ನೂ ಪ್ರಚಾರ ಆರಂಭಿಸಿಲ್ಲ. ಬಿಜೆಪಿಯಿಂದ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಣಕ್ಕಿಳಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಶಿಕಾರಿಪುರದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿರುವುದರಿಂದಾಗಿ, ಇಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎನ್ನುವ ಚರ್ಚೆ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.