ಮೈಸೂರು: ‘ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದ ಕಥೆ. ಅದರ ಬಗ್ಗೆ ನಾವ್ಯಾರೂ ಮಾತನಾಡಬಾರದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಐದು ವರ್ಷದವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಲ್ಲಿಗೆ ಚರ್ಚೆಗಳೆಲ್ಲವೂ ಮುಗಿಯಿತೆಂದೇ ಅರ್ಥ. ಮುಗಿದ ಕಥೆಯ ಬಗ್ಗೆ ನಮ್ಮ ಪ್ರತಿಕ್ರಿಯೆ ನೀಡಿದರೆ ಅದು ತಪ್ಪಾಗುತ್ತದೆ’ ಎಂದರು.
‘ಸೆಪ್ಟೆಂಬರ್ನಲ್ಲಿ ಯಾವ ಕ್ರಾಂತಿಯೂ ಆಗುವುದಿಲ್ಲ. ಎಲ್ಲವೂ ಶಾಂತಿಯಷ್ಟೆ. ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಯೇ ಉತ್ತರ ಕೊಟ್ಟಿದ್ದಾರೆ’ ಎಂದು ಹೇಳಿದರು.
‘ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ’ ಎಂಬ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿಕೆಯನ್ನು ತಳ್ಳಿಹಾಕಿದ ಅವರು, ‘ನಾವು ಪ್ರತಿ ತಿಂಗಳೂ ಹಣ ಹಾಕುತ್ತಿದ್ದೇವೆ. ಮೇವರೆಗೂ ಸಂಪೂರ್ಣವಾಗಿ ನೀಡಿದ್ದೇವೆ. ಹಣ ಹಾಕಲು ಯಾವ ತೊಡಕುಗಳೂ ಇಲ್ಲ. ರೇವಣ್ಣ ಯಾಕೆ ಆ ರೀತಿ ಹೇಳಿದ್ದಾರೆಯೋ ಗೊತ್ತಿಲ್ಲ. ಅವರೊಂದಿಗೆ ಮಾತನಾಡುತ್ತೇನೆ. ನಾವು ಮಾತು ಕೊಟ್ಟಂತೆ ಫಲಾನುಭವಿಗಳಿಗೆ ಹಣ ಹಾಕುತ್ತಿದ್ದೇವೆ’ ಎಂದು ಸಮರ್ಥಿಸಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.