ಮೈಸೂರು: ‘ಬೆಂಗಳೂರು ವಿಮಾನ ನಿಲ್ದಾಣದ ಮುಂದೆ ನಿರ್ಮಿಸಲಾದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣವು ಪಕ್ಷದ ಕಾರ್ಯಕ್ರಮದಂತಿದೆ’ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದರು.
‘ಪ್ರತಿಮೆ ಸ್ಥಾಪಿಸಿದ್ದು ಸಂತೋಷದ ವಿಚಾರ. ಕಾರ್ಯಕ್ರಮವವನ್ನು ಇಡೀ ನಾಡು ಸಂತೋಷಪಡುವಂತೆ ಆಗಬೇಕಿತ್ತು. ಆದರೆ, ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕ್ರಮವಾಗಿ ಮಾಡಿರುವುದು ಸರಿಯಲ್ಲ. ಬೇರೆಯವರಿಗೆ ಅವಕಾಶವೇ ನೀಡಿಲ್ಲ. ರಾಜ್ಯ ಸಭಾ ಸದಸ್ಯ ಎಚ್.ಡಿ.ದೇವೇಗೌಡ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ. ಸರ್ಕಾರ ಈ ವಿಚಾರವನ್ನು ಕೂಡಲೇ ಸರಿಪಡಿಸಬೇಕಿತ್ತು’ ಎಂದು ತಮ್ಮದೇ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಹರಿಹಾಯ್ದರು.
‘ಸರ್ಕಾರದ ಹಣದಿಂದಲೇ ಪ್ರತಿಮೆ ನಿರ್ಮಿಸಲಾಗಿದೆ. ಇದು ಸಂಪೂರ್ಣವಾಗಿ ಸರ್ಕಾರದ ಕಾರ್ಯಕ್ರಮವಾಗಿದ್ದು, ಪಕ್ಷದ ಕಾರ್ಯಕ್ರಮವಾಗಿದ್ದು ಸರಿಯಾದ ನಿರ್ಧಾರವಲ್ಲ’ ಎಂದು ಪುನರುಚ್ಚರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.