ADVERTISEMENT

ಬಿಎಸ್‌ವೈ ಬಿಟ್ಟರೇ ಬಿಜೆಪಿಯಿಲ್ಲ: ಕೆ.ಎಚ್‌.ಮುನಿಯಪ್ಪ

ಒಳ ಮೀಸಲಾತಿ ಹೋರಾಟ: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಜವಾಬ್ದಾರಿ ಹೊರಲಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2021, 15:48 IST
Last Updated 21 ಮಾರ್ಚ್ 2021, 15:48 IST
ಕೆ.ಎಚ್‌.ಮುನಿಯಪ್ಪ
ಕೆ.ಎಚ್‌.ಮುನಿಯಪ್ಪ   

ಮೈಸೂರು: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಿಸಿದರೆ ಬಿಜೆಪಿಗೆ ಭವಿಷ್ಯವಿಲ್ಲ’ ಎಂದು ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಮುಖಂಡ ಕೆ.ಎಚ್‌.ಮುನಿಯಪ್ಪ ಭಾನುವಾರ ಇಲ್ಲಿ ಹೇಳಿದರು.

ಪಂಚ ರಾಜ್ಯಗಳ ಚುನಾವಣೆ ಬಳಿಕ ಯಡಿಯೂರಪ್ಪ ಬದಲಾವಣೆ ಆಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ‘ಬಿಎಸ್‌ವೈ ಹೊರತುಪಡಿಸಿದ ಬಿಜೆಪಿಯನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಬಿಜೆಪಿಗೆ ಅಸ್ತಿತ್ವವೂ ಇರಲ್ಲ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ತಿಳಿಸಿದರು.

‘ಜನಸಂಖ್ಯೆ ಆಧಾರದಲ್ಲಿ ಒಳ ಮೀಸಲಾತಿ ನಿಗದಿಯಾಗಬೇಕು. ಮೀಸಲಾತಿಯ ಹೋರಾಟ ಇದೀಗ ರಾಜಕೀಯ ತಿರುವು ಪಡೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬಸವ ಅನುಯಾಯಿ ಆಗಿದ್ದರೆ, ಮೊದಲು ಹಿಂದುಳಿದ ವರ್ಗಗಳ ಆಯೋಗ ನೀಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿ ಹಾಗೂ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸಚಿವಸಂಪುಟ ಸಭೆಯಲ್ಲಿ ಅಂಗೀಕರಿಸಿ, ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಡಲಿ’ ಎಂದು ಮುನಿಯಪ್ಪ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

‘ಚುನಾವಣೆಗಾಗಿ ಮೀಸಲಾತಿ ಘೋಷಣೆಯಾಗುವುದು ಬೇಡ. ಸಂವಿಧಾನದಡಿ ವೈಜ್ಞಾನಿಕವಾಗಿ ಚರ್ಚೆಯಾಗಲಿ. ಸದಾಶಿವ ಆಯೋಗದ ವರದಿ ಜಾರಿಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಜವಾಬ್ದಾರಿ ತೆಗೆದುಕೊಂಡು ಮುನ್ನಡೆಯಬೇಕಿದೆ. ಮಾದಿಗರು ತುಂಬಾ ಹಿಂದುಳಿದಿದ್ದಾರೆ. ನ್ಯಾಯ ಕೊಡಿಸುವ ಕೆಲಸ ನಡೆಯಲಿ’ ಎಂದು ಹೇಳಿದರು.

ಸಿದ್ದರಾಮಯ್ಯ ಒಬ್ಬರೇ ಅಲ್ಲ: ‘ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ರೇಸ್‌ನಲ್ಲಿ ಸಿದ್ದರಾಮಯ್ಯ ಒಬ್ಬರೇ ಇಲ್ಲ. ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವರಿದ್ದಾರೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ನಮ್ಮಲ್ಲಿ ಹೈಕಮಾಂಡ್‌ ನಿರ್ಧರಿಸಲಿದೆ. ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿಯಿದೆ. ಈಗಲೇ ಅದರ ಚರ್ಚೆ ಬೇಡ’ ಎಂದು ಮುನಿಯಪ್ಪ ತಿಳಿಸಿದರು.

‘ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ. ಬಿಜೆಪಿಯವರು ಕೋವಿಡ್‌ನಲ್ಲೂ ಭ್ರಷ್ಟಾಚಾರದ ಮೂಲಕ ಲೂಟಿ ಹೊಡೆದ ದುಡ್ಡು ಚೆಲ್ಲಿ ಗೆಲುವಿಗೆ ಮುಂದಾಗಲಿದ್ದಾರೆ. ಜನರು ವಾಸ್ತವ ಅರ್ಥ ಮಾಡಿಕೊಂಡು ವೋಟ್‌ ಹಾಕಬೇಕು’ ಎಂದರು.

‘ಎಡಗೈ ಸಮುದಾಯಕ್ಕೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ದೊರೆಯಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.