ADVERTISEMENT

ಕೊಡವ ಬುಡಕಟ್ಟು ಕುಲಕ್ಕೆ ರಾಜಾಶ್ರಯ ನೀಡಿ: ಎನ್.ಯು.ನಾಚಪ್ಪ

ಎಸ್‌ಟಿ ಸ್ಥಾನಮಾನ ನೀಡುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 16:07 IST
Last Updated 13 ಅಕ್ಟೋಬರ್ 2020, 16:07 IST

ಮೈಸೂರು: ‘ಕೊಡವ ಬುಡಕಟ್ಟು ಕುಲವನ್ನು ಪ್ರಾಚೀನ ಆದಿಮ ಸಂಜಾತ ಬುಡಕಟ್ಟು ಜನಾಂಗವೆಂದು ಘೋಷಿಸಬೇಕು. ಸಂವಿಧಾನದ 340, 342ನೇ ವಿಧಿಯಂತೆ ಎಸ್.ಟಿ. ಪಟ್ಟಿಯಲ್ಲಿ ಸೇರಿಸಿ ರಾಜಾಶ್ರಯ ನೀಡಬೇಕು’ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಅಧ್ಯಕ್ಷ ಎನ್.ಯು.ನಾಚಪ್ಪ ಸರ್ಕಾರಕ್ಕೆ ಒತ್ತಾಯಿಸಿದರು.

‘ಕೊಡಗಿನ ಮೂಲ ನಿವಾಸಿಗಳಾದ ಕೊಡವ ಜನಾಂಗ ತನ್ನದೇ ವಿಶಿಷ್ಟ ಸಂಸ್ಕೃತಿ, ಆಚರಣೆ, ಸಂಪ್ರದಾಯಗಳಿಂದ ಹೆಸರುವಾಸಿಯಾಗಿದೆ. ಅಂಕಿ -ಅಂಶಗಳ ಪ್ರಕಾರ ಕೊಡಗು ಹೊರತುಪಡಿಸಿ, ದೇಶ–ವಿದೇಶಗಳಲ್ಲಿ ನೆಲೆಸಿರುವ ಕೊಡವರ ಸಂಖ್ಯೆ ಸುಮಾರು 1.60 ಲಕ್ಷವಿದೆ’ ಎಂದು ಮಂಗಳವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಕೊಡವ ಜನಾಂಗದೊಳಗೆ 18 ಉಪ ಜಾತಿಗಳಿವೆ. ಆರ್ಥಿಕವಾಗಿ , ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಾಕಷ್ಟು ಮುಂದುವರೆದಿದ್ದರೂ, ಹಿಂದುಳಿದಿರುವವರ ಸಂಖ್ಯೆಯೂ ಸಾಕಷ್ಟಿದೆ’ ಎಂದರು.

ADVERTISEMENT

‘ನಮ್ಮ ಸಂಘಟನೆಯು ನವದೆಹಲಿಯಲ್ಲಿ ಒತ್ತಡ ಹಾಕಿದ ಪರಿಣಾಮ, ಹಿಂದಿನ ಕೇಂದ್ರ–ರಾಜ್ಯ ಸರ್ಕಾರಗಳು ಬುಡಕಟ್ಟು (ಎಸ್‌ಟಿ) ಸ್ಥಾನಮಾನ ನೀಡುವ ಕುರಿತು, ಕುಲಶಾಸ್ತ್ರ ಅಧ್ಯಯನಕ್ಕೆ ಮುಂದಾಗಿದ್ದವು. ಇದನ್ನು ಮಂಡಿಸಲು ಈಗಿನ ಸರ್ಕಾರಗಳು ಮುಂದಾಗಬೇಕು’ ಎಂದು ಅವರು ಒತ್ತಾಯಿಸಿದರು.

‘ಅಸ್ಸಾಮಿನಲ್ಲಿ ಸತತ 8 ಬಾರಿ ತಿರಸ್ಕಾರಕ್ಕೊಳಗಾದ ಅಸ್ಸಾಮಿನ 6 ಬುಡಕಟ್ಟು ವರ್ಗಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಕೇಂದ್ರ ಮತ್ತು ಅಸ್ಸಾಂ ಸರ್ಕಾರ ಸಂವಿಧಾನ ತಿದ್ದುಪಡಿಗೆ ಮುಂದಾಗಿವೆ. ಇದೇ ರೀತಿ ಕೊಡವ ಕುಲದ ಸುದೀರ್ಘ ಅಶೋತ್ತರವಾದ ಸ್ವಾಯತ್ತತೆ ಮತ್ತು ಎಸ್‌ಟಿ ಪಟ್ಟಿ ಸೇರ್ಪಡೆಗಾಗಿ ತುರ್ತಾಗಿ ಸಂವಿಧಾನ ತಿದ್ದುಪಡಿಗೆ ಮುಂದಾಗಬೇಕು’ ಎಂದು ಆಗ್ರಹಿಸಿದರು.

ಕೊಡವ ನ್ಯಾಷನಲ್ ಕೌನ್ಸಿಲ್‌ನ ಪದಾಧಿಕಾರಿಗಳಾದ ಅರೆಯಡ ಗಿರೀಶ್, ಕಲಿಯಂಡ ಪ್ರಕಾಶ್‌, ಚಂಬಂಡ ಜನತ್ ಕುಮಾರ್, ಅಪ್ಪನೆರಂಡ, ಮನೋಜ್ ಮಂದಪ್ಪ ಪತ್ರಿಕಾಗೋಷ್ಠಿಯಲ್ಲಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.