ಮೈಸೂರು: ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷಎಸ್.ಕೃಷ್ಣಮೂರ್ತಿ (86) ಇಲ್ಲಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ಭಾನುವಾರ ರಾತ್ರಿ ನಿಧನ ಹೊಂದಿದರು. ಇವರ ಅಂತ್ಯಕ್ರಿಯೆಯು ಸೋಮವಾರ ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನಹರಿಶ್ಚಂದ್ರ ಘಾಟ್ನಲ್ಲಿ ನೆರವೇರಿತು. ಇವರಿಗೆ ಪತ್ನಿ ಲಲಿತಮ್ಮ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ.
ಸರಸ್ವತಿಪುರಂನಲ್ಲಿ ವಾಸ ಇದ್ದ ಕೃಷ್ಣಮೂರ್ತಿ ಅವರು ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು. ನಂತರ, 1968ರಿಂದ 1985ರವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1991ರಿಂದ 2011ರವರೆಗೆ ಶಾರದಾ ವಿಲಾಸ ವಿದ್ಯಾಸಂಸ್ಥೆಯಲ್ಲಿ ಗೌರವ ಕಾರ್ಯದರ್ಶಿಯಾಗಿಯೂ ಸಂಸ್ಥೆಯ ಪ್ರಗತಿಗೆ ದುಡಿದಿದ್ದರು. ಜತೆಗೆ, ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾಗಿ, ಬಬ್ಬೂರು ಕಮ್ಮೆ ಸಂಘದ ಸಂಸ್ಥಾಪಕ ಸದಸ್ಯರಾಗಿ, ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಇವರ ಗೌರವಾರ್ಥ ಶಾರದಾ ವಿಲಾಸ ವಿದ್ಯಾಸಂಸ್ಥೆಯಲ್ಲಿ ಸೋಮವಾರ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು. ಈ ವೇಳೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್.ಪಾರ್ಥಸಾರಥಿ, ಕೃಷ್ಣಮೂರ್ತಿ ಅವರ ಪುತ್ರ ಮತ್ತು ಸಂಸ್ಥೆಯ ಗೌರವ ಕಾರ್ಯದರ್ಶಿ ಎಚ್.ಕೆ.ಶ್ರೀನಾಥ್ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಸಂಸ್ಥೆಯ ಶಾಲಾ, ಕಾಲೇಜುಗಳಿಗೆ ಒಂದು ಮಟ್ಟಿಗೆ ರಜೆ ಘೋಷಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.