ADVERTISEMENT

ಕುಂಭಮೇಳಕ್ಕೆ 3 ದಿನ ಬಾಕಿ; ತ್ರಿವೇಣಿ ಸಂಗಮದಲ್ಲಿ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2019, 4:24 IST
Last Updated 14 ಫೆಬ್ರುವರಿ 2019, 4:24 IST
ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ತಾತ್ಕಾಲಿಕ ಸೇತುವೆ
ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ತಾತ್ಕಾಲಿಕ ಸೇತುವೆ   

ಮೈಸೂರು: ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ. 17ರಿಂದ ಮೂರು ದಿನ ಕುಂಭಮೇಳ ನಡೆಯಲಿದ್ದು, ಮಠಾಧೀಶರು, ಋಷಿ ಮುನಿಗಳು ಸೇರಿದಂತೆ ಲಕ್ಷಾಂತರ ಭಕ್ತರು ಪಾಲ್ಗೊಳ್ಳಲಿದ್ದಾರೆ.

ಧಾರ್ಮಿಕ ಕಾರ್ಯಕ್ರಮಕ್ಕೆ ಕೇವಲ ಮೂರು ದಿನ ಬಾಕಿ ಇದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ದಕ್ಷಿಣ ಕಾಶಿಯೆಂದೇ ಪ್ರಖ್ಯಾತಿ ಪಡೆದಿರುವ ಈ ಪ್ರದೇಶದಲ್ಲಿ ಕಾವೇರಿ, ಕಪಿಲಾ ಹಾಗೂ ಸ್ಫಟಿಕ ನದಿಗಳು ಸಂಗಮವಾಗುತ್ತವೆ.

1989ರಲ್ಲಿ ಆರಂಭವಾದ ಕುಂಭಮೇಳ ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುತ್ತದೆ. ಈ ಬಾರಿ ನಡೆಯುತ್ತಿರುವುದು 11ನೆಯದ್ದು. ಮೇಳದಲ್ಲಿ ಧಾರ್ಮಿಕ ಸಭೆ ಹಾಗೂ ಯಜ್ಞ ಯಾಗಾದಿಗಳು ನಡೆಯಲಿವೆ.

ADVERTISEMENT

ಮೂರನೇ ದಿನ ಮಹೋದಯ ಪುಣ್ಯ ಸ್ನಾನವಿರುವುದರಿಂದ ಹೆಚ್ಚಿನ ಭಕ್ತರು ಸೇರುವ ನಿರೀಕ್ಷೆ ಇದೆ. ಹೀಗಾಗಿ, ನದಿಯ ಒಳಗೆ ಬ್ಯಾರಿಕೇಡ್ ಅಳವಡಿಸಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪುಣ್ಯಸ್ನಾನದ ನಂತರ ಬಟ್ಟೆ ಬದಲಿಸಲು ತಾತ್ಕಾಲಿಕ ಕೊಠಡಿ ನಿರ್ಮಿಸಲಾಗುತ್ತಿದೆ.

ಮೇಳದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಸಾವಿರಾರರು ಸ್ವಯಂ ಸೇವಕರು ಹಾಗೂ ಪೌರ ಕಾರ್ಮಿಕರನ್ನು ನಿಯೋಜಿಸಲಾಗಿದೆ.

ಪಟ್ಟಣದ ಗುಂಜಾನರಸಿಂಹಸ್ವಾಮಿ ದೇಗುಲದ ಸೋಪಾನಕಟ್ಟೆಯಿಂದ ತ್ರಿವೇಣಿ ಸಂಗಮದ ಧಾರ್ಮಿಕ ಸಭೆ ನಡೆಯುವ ಸ್ಥಳದವರೆಗೆ ಕಪಿಲಾ ನದಿಗೆ ಅಡ್ಡಲಾಗಿ ತಾತ್ಕಾಲಿಕ ತೂಗು ಸೇತುವೆ ನಿರ್ಮಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.