ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ಡೌನ್ ಮುಂದುವರಿಸುವ ಬಗ್ಗೆ ಚಿಂತನೆ ಇದ್ದು, ಜನಪ್ರತಿನಿಧಿಗಳ ಸಭೆ ಕರೆದು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಇಲ್ಲಿ ತಿಳಿಸಿದರು.
ಮುಖ್ಯಮಂತ್ರಿ ಜೊತೆಗಿನ ವಿಡಿಯೊ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕರು, ಸಂಸದರ ಜೊತೆ ಚರ್ಚಿಸಿ, ಲಾಕ್ಡೌನ್ ವಿಸ್ತರಣೆ ಮಾಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು’ ಎಂದರು.
‘ಜಿಲ್ಲೆಯಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಪರಿಕಲ್ಪನೆ ಯಶಸ್ವಿಯಾಗುತ್ತಿದ್ದು, ಈ ಯೋಜನೆಯನ್ನು ಮತ್ತೊಂದು ವಾರ ವಿಸ್ತರಣೆ ಮಾಡಲಾಗುವುದು. ಈ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೂ ತಂದಿದ್ದು, ಒಪ್ಪಿಗೆ ನೀಡಿದ್ದಾರೆ. ಆರ್ಟಿಪಿಸಿಆರ್ ಪರೀಕ್ಷೆ ಹೆಚ್ಚಿಸಿ 24 ಗಂಟೆಯೊಳಗೆ ಫಲಿತಾಂಶ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ, ಪಾಸಿಟಿವಿಟಿ ಪ್ರಮಾಣ ಕಡಿಮೆಗೊಳಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದ್ದಾರೆ’ ಎಂದು ವಿವರಿಸಿದರು.
‘ಲಸಿಕೆ ಪ್ರಮಾಣ ಜಿಲ್ಲೆಯಲ್ಲಿ ಶೇ 71ರಷ್ಟಿದೆ. ಶೇ 100ರಷ್ಟು ಸಾಧನೆ ನಮ್ಮ ಗುರಿಯಾಗಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.