
ನಂಜನಗೂಡು: ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ₹50 ಕೋಟಿ ವಿಶೇಷ ಅನುದಾನ ನೀಡಿದ್ದು, ಆ ಅನುದಾನದಲ್ಲಿ ನಿರ್ಮಾಣ ಹಂತದಲ್ಲಿರುವ ಮಡಿವಾಳ ಸಮುದಾಯ ಭವನವನ್ನು ಪೂರ್ಣಗೊಳಿಸಲು ₹50 ಲಕ್ಷ ನೀಡಲಾಗಿದೆ’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ನಗರದ ಮಡಿವಾಳ ಸಮುದಾಯ ಭವನದಲ್ಲಿ ನಡೆಯುತ್ತಿರುವ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಸೋಮವಾರ ಭೇಟಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
‘ಮಡಿವಾಳ ಸಮುದಾಯ ಶೈಕ್ಷಣಿಕ, ರಾಜಕೀಯ, ಸಾಮಾಜಿಕವಾಗಿ ಹಿಂದುಳಿದಿದ್ದು, ಶಿಕ್ಷಣದಿಂದ ಮಾತ್ರವೇ ಮುನ್ನೆಲೆಗೆ ಬರಲು ಸಾಧ್ಯ, ನಿಮ್ಮ ಮಕ್ಕಳಿಗೆ ಕಡ್ಡಾಯವಾಗಿ ಉತ್ತಮ ಶಿಕ್ಷಣ ಕೊಡಿಸಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ಸಮುದಾಯಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಹಿರಿಯರ ಮಾರ್ಗದರ್ಶನದಲ್ಲಿ ನಾನೂ ಕ್ಷೇತ್ರದಲ್ಲಿ ಎಲ್ಲಾ ಜಾತಿಯವರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತಿದ್ದೇನೆ, ಅರ್ಧಕ್ಕೆ ನಿಂತಿರುವ ಮಡಿವಾಳ ಸಮಾಜದ ಸಮುದಾಯ ಭವನ ಪೂರ್ಣಗೊಳಿಸಲು ಈಗಾಗಲೇ ಅಧಿಕಾರಿಗಳು, ಕ್ರಿಯಾಯೋಜನೆ ಸಿದ್ಧಪಡಿಸಿಕೊಂಡು ಹೋಗಿದ್ದಾರೆ, ಶೀಘ್ರದಲ್ಲೇ ಕಾಮಗಾರಿ ಚಾಲನೆಗೊಂಡು ಮುಕ್ತಾಯಗೊಳ್ಳಲಿದೆ’ ಎಂದು ಭರವಸೆ ನೀಡಿದರು.
ಮಡಿವಾಳ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ನಂಜಪ್ಪ ಅವರನ್ನು ಸನ್ಮಾನಿಸಲಾಯಿತು. ಮಡಿವಾಳ ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ಹೆಜ್ಜಿಗೆ ಪ್ರಸನ್ನ ಕುಮಾರ್, ಕಾರ್ಯದರ್ಶಿ ಕೆ.ಎಂ.ಬಸವರಾಜು, ಗೌರವಾಧ್ಯಕ್ಷ ಶಿವಣ್ಣ, ಉಪಾಧ್ಯಕ್ಷರಾದ ರವಿ, ಮಹೇಶ್, ಮುಖಂಡರಾದ ನಾಗರಾಜು, ಮಹದೇವಸ್ವಾಮಿ, ಬಸವರಾಜು, ಸುರೇಶ್, ಮಾಧು, ಶಿವಕುಮಾರ್, ನಂಜುಂಡ ಶೆಟ್ಟಿ, ಗಣೇಶ್, ಚಂದ್ರಶೇಖರ್
ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.