ADVERTISEMENT

30ರಂದು ಬೃಹತ್ ಪ್ರತಿಭಟನೆ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನಿಲ್ಲಿಸದಿರಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2019, 9:35 IST
Last Updated 26 ನವೆಂಬರ್ 2019, 9:35 IST
ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು
ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು   

ಮೈಸೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನಿಲ್ಲಿಸಿರುವ ಸರ್ಕಾರದ ಕ್ರಮ ಖಂಡಿಸಿ ಡಿ. 30ರಂದು ಬೆಳಿಗ್ಗೆ 11.30ಕ್ಕೆ ‍ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ನಿರ್ಧರಿಸಿದ್ದಾರೆ.

ವಿದ್ಯಾರ್ಥಿ ವೇತನ ನಿಲ್ಲಿಸಿರುವ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ದಲಿತ ಸಂಘಟನೆಗಳ ಒಕ್ಕೂಟ, ಜಿಲ್ಲಾ ಕಾಯಕ ಸಮಾಜಗಳ ಒಕ್ಕೂಟ, ಜಿಲ್ಲಾ ಸವಿತಾ ಸಮಾಜ, ಜಿಲ್ಲಾ ಕುಂಬಾರರ ಸಂಘ, ಜಿಲ್ಲಾ ವೀರ ಮಡಿವಾಳರ ಸಂಘ ಇಲ್ಲಿ ಮಂಗಳವಾರ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು.

ಅಂದು ನಡೆಯುವ ಪ್ರತಿಭಟನೆಯಲ್ಲಿ ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಅಷ್ಟರೊಳಗೆ ಈ ಆದೇಶವನ್ನು ವಾಪಸ್ ಪಡೆದು, ಮೊದಲಿನಂತೆ ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಮಂಜೂರು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ADVERTISEMENT

ಇದುವರೆಗೂ ವಿದ್ಯಾರ್ಥಿ ವೇತನ ಪಡೆಯುತ್ತಿದ್ದ ವಿದ್ಯಾರ್ಥಿಗಳು ಅದರಿಂದ ಲೇಖನ ಸಾಮಗ್ರಿಗಳು, ಸಮವಸ್ತ್ರ ಹಾಗೂ ಇನ್ನಿತರ ತಮ್ಮ ವಿದ್ಯಾಭ್ಯಾಸದ ಖರ್ಚುಗಳನ್ನು ನಿಭಾಯಿಸಲು ಬಳಸುತ್ತಿದ್ದರು. ಇದರಿಂದ ಪೋಷಕರ ಆರ್ಥಿಕ ಹೊರೆಯೂ ತಗ್ಗುತ್ತಿತ್ತು. ಆದರೆ, ಸರ್ಕಾರ ಈಗ ಏಕಾಏಕಿ ವಿದ್ಯಾರ್ಥಿ ವೇತನ ನಿಲ್ಲಿಸಿರುವುದರಿಂದ ಅವರಿಗೆಲ್ಲ ತೊಂದರೆಯಾಗಿದೆ ಎಂದು ಕಿಡಿಕಾರಿದರು.

ದೇವರಾಜ ಅರಸು ಪ್ರಶಸ್ತಿ ನೀಡಲೂ ಸರ್ಕಾರ ಮೀನಮೇಷ ಎಣಿಸುತ್ತಿದೆ. ಮತ ಕೇಳಲು ದೇವರಾಜಅರಸು ಅವರ ಹೆಸರು ಬೇಕು. ಆದರೆ, ಅವರ ಹೆಸರಿನಲ್ಲಿ ಪ್ರಶಸ್ತಿ ಮಾತ್ರ ನೀಡುತ್ತಿಲ್ಲ. ಇದು ಅವರ ಕೆಲಸವನ್ನು ಗೌಣವಾಗಿಸುವ ಕೆಲಸ. ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಮತದಾರರು ಮತ ಚಲಾಯಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಎನ್.ಆರ್.ನಾಗೇಶ್, ಕಾಯಕ ಸಮಾಜಗಳ ಒಕ್ಕೂಟದ ರಮೇಶ್, ವೀರಮಡಿವಾಳರ ಸಂಘದ ಸಂಚಾಲಕ ಸತ್ಯನಾರಾಯಣ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯ ಡಾ.ಮಧು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.