ಹುಣಸೂರು: ‘ಆಧುನಿಕ ಜೀವನಶೈಲಿಯಿಂದ ಯುವ ಪೀಳಿಗೆ ಮಾನಸಿಕ ಒತ್ತಡಕ್ಕೆ ಒಳಗಾಗಿ ಮನೋರೋಗಕ್ಕೆ ತುತ್ತಾಗುತ್ತಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ನಮ್ರತಾ ಎಸ್. ಹೊಸಮಠ ಹೇಳಿದರು.
ನಗರದ ಸರ್ಕಾರಿ ಕೈಗಾರಿಕಾ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಜಂಟಿಯಾಗಿ ಬುಧವಾರ ಆಯೋಜಿಸಿದ್ದ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ನಗರ ಪ್ರದೇಶಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ಮನೋರೋಗಕ್ಕೆ ಬಲಿಯಾಗುತ್ತಿದ್ದಾರೆ. ಮಾನಸಿಕ ಒತ್ತಡವನ್ನು ಹತ್ತಿರದ ಸಂಬಂಧಿ ಅಥವಾ ಆತ್ಮೀಯರೊಂದಿಗೆ ಹಂಚಿಕೊಳ್ಳುವುದರಿಂದ ಒತ್ತಡದಿಂದ ಮುಕ್ತರಾಗಬಹುದು’ ಎಂದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಬಿ.ಬೃಂದಾ ಮಾತನಾಡಿ, ‘ಜಿಲ್ಲೆಯ ತಾಲ್ಲೂಕು ಕೇಂದ್ರದಲ್ಲಿ ಮನೋಚೈತನ್ಯ ಕ್ಲಿನಿಕ್ ತೆರೆದಿದ್ದು ಪ್ರತಿ ಮಂಗಳವಾರ ಮತ್ತು ಶುಕ್ರವಾರ ಕೌನ್ಸೆಲಿಂಗ್ ಹಮ್ಮಿಕೊಳ್ಳುತ್ತಿದ್ದೇವೆ’ ಎಂದರು.
‘ಜಿಲ್ಲೆಯಲ್ಲಿ 2024-25ರ ಸಾಲಿನಲ್ಲಿ 30,157 ಮಾನಸಿಕ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗಿದ್ದು, 1,031 ಜನರಿಗೆ ಉಚಿತ ಆಪ್ತ ಸಮಾಲೋಚನೆ ಮೂಲಕ ಒತ್ತಡ ನಿರ್ವಹಣೆ ಕುರಿತು ಜಾಗೃತಿ ಮೂಡಿಸಲಾಗಿದೆ’ ಎಂದು ಹೇಳಿದರು.
ಮಾನಸಿಕ ಆರೋಗ್ಯ ಕೇಂದ್ರದ ಮನೋವೈದ್ಯೆ ಡಾ.ಮಂಜುಶ್ರೀ ಮಾತನಾಡಿ, ‘ಕೆ.ಆರ್.ಆಸ್ಪತ್ರೆಯಲ್ಲಿ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ನಿರಾಶ್ರಿತ ಮಾನಸಿಕ ಅಸ್ವಸ್ಥರಿಗೆ 30 ಹಾಸಿಗೆ ಸಾಮರ್ಥ್ಯದ ವಾರ್ಡ್ ತೆರೆದು ಚಿಕಿತ್ಸೆ ನೀಡುತ್ತಿದೆ. ಹೆಚ್ಚಿನ ಮಾಹಿತಿಗೆ 14416 ಕ್ಕೆ ಕರೆ ಮಾಡಬಹುದು’ ಎಂದರು.
ಕಾರ್ಯಕ್ರಮದಲ್ಲಿ ಡಾ.ಭಾನು, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮಂಜುನಾಥ್, ರಶ್ಮಿ, ಪಾವರ್ತಿ, ಹುಣಸೂರು ವಕೀಲರ ಸಂಘದ ಅಧ್ಯಕ್ಷ ಶಿವಣ್ಣೇಗೌಡ ಮಾತನಾಡಿದರು.
ವೇದಿಕೆಯಲ್ಲಿ ಎಪಿಪಿ ಪಾರ್ವತಿ, ಎಚ್.ಡಿ. ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದರ್ಶನ್ ಎಂ.ವಿ., ಪ್ರಾಂಶುಪಾಲ ವಿಶ್ವಕುಮಾರ್ ಕೆ.ಎ. ಉಪಸ್ಥಿತರಿದ್ದರು. ಆರೋಗ್ಯ ಅಧಿಕಾರಿ ರಾಜೇಶ್ವರಿ ಸ್ವಾಗತಿಸಿದರು.
30,157 ಮಾನಸಿಕ ಅಸ್ವಸ್ಥರಿಗೆ ಚಿಕಿತ್ಸೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.