
ನಂಜನಗೂಡು: ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ರದ್ದುಗೊಳಿಸಿ ‘ವಿಬಿ-ಜಿ ರಾಮ್ ಜಿ’ ಅನ್ನು ಜಾರಿಗೆ ತಂದಿರುವ ನಿರ್ಧಾರವನ್ನು ವಿರೋಧಿಸಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ತಾಲ್ಲೂಕಿನ ಮಲ್ಲೂಪುರ ಗ್ರಾಮದಿಂದ ಮಡಹಳ್ಳಿ ಗ್ರಾಮದವರೆಗೆ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ‘ಬಹು ಹಿಂದಿನಿಂದಲೂ ಮನರೇಗಾ ಯೋಜನೆ ಜಾರಿಯಲ್ಲಿದ್ದು, ಬಡ ಕೂಲಿ ಕಾರ್ಮಿಕ ವರ್ಗಕ್ಕೆ ಯೋಜನೆ ಅನುಕೂಲಕರವಾಗಿತ್ತು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ರದ್ದುಗೊಳಿಸಿ ‘ವಿಬಿ-ಜಿ ರಾಮ್ ಜಿ’ ಅನ್ನು ಜಾರಿಗೆ ತರುವ ಮೂಲಕ ಬಡ ಕಾರ್ಮಿಕರಿಗೆ ಅನ್ಯಾಯ ಎಸಗುತ್ತಿದೆ. ಕೂಡಲೇ ಹೊಸ ಯೋಜನೆಯನ್ನು ಕೈಬಿಟ್ಟು ಮನರೇಗಾವನ್ನೇ ಮುಂದುವರಿಸಬೇಕು. ಈ ನಿಟ್ಟಿನಲ್ಲಿ ಹೋರಾಟ ರೂಪಿಸಲು ವರುಣ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ನಡೆಸಲಾಗುವುದು’ ಎಂದು ತಿಳಿಸಿದರು.
ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯ್ ಕುಮಾರ್ ಮಾತನಾಡಿ, ‘ಮನರೇಗಾ ಯೋಜನೆಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದೆ. ಕಾಂಗ್ರೆಸ್ವತಿಯಿಂದ ಫೆ.21ರವರೆಗೆ ತಾಲ್ಲೂಕು ಕೇಂದ್ರಗಳಲ್ಲಿ ಪಾದಯಾತ್ರೆಯ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.
ರಾಜ್ಯ ವಾಲ್ಮೀಕಿ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಕರ್ನಾಟಕ ಮೃಗಾಲಯ ನಿಗಮದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಮುಖಂಡರಾದ ಇಂಧನ್ ಬಾಬು, ಎಂ.ಸಿ.ಹುಂಡಿ ಶಿವಪ್ರಸಾದ್, ಕೆಂಪಣ್ಣ, ಹೊಸಕೋಟೆ ಬಸವರಾಜು, ರಮೇಶ್, ತಗಡೂರು ಶಿವರಾಂ, ಬಾಲು, ಮಲ್ಲೂಪುರ ಪ್ರಕಾಶ್, ಶಿವನಾಗ, ಹದಿನಾರು ಸಿದ್ದರಾಜನಾಯಕ, ನಗರ್ಲೆ ನಾರಾಯಣನಾಯಕ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.