ಮೈಸೂರು: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಮೈಸೂರಿನಲ್ಲಿ ಶುಕ್ರವಾರ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಸಮಾಧಾನ ಹೊರಹಾಕಿ ಹೊರನಡೆದಿದ್ದಾರೆ.
ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಿ.ಟಿ.ದೇವೇಗೌಡ ಅವರ ಆಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು.
ಸಭೆ ಆರಂಭವಾಗುತ್ತಿದ್ದಂತೆಯೇ ಮಾತನಾಡಿದ ಪುಟ್ಟರಂಗಶೆಟ್ಟಿ, ‘ನನ್ನನ್ನು ಕಡೆಗಣಿಸಲಾಗಿದೆ. ಜಿ.ಟಿ.ದೇವೇಗೌಡ ಅವರನ್ನು ಬಿಟ್ಟರೆ ನಾನೇ ಸೀನಿಯರ್. ಆದರೆ ಉಪಾಧ್ಯಕ್ಷರ ಪಟ್ಟಿಯಲ್ಲಿ ನನ್ನ ಹೆಸರಿಲ್ಲ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸಿಲ್ಲ. ನಾನು ಸಭೆಯಲ್ಲಿ ಏಕೆ ಪಾಲ್ಗೊಳ್ಳಬೇಕು’ ಎಂದು ಪ್ರಶ್ನಿಸಿದ್ದಾರೆ.
‘ದಸರಾ ಪೋಸ್ಟರ್ನಲ್ಲಿ ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಜಯಮಾಲಾ ಅವರ ಫೋಟೋಗಳಿವೆ. ನನ್ನ ಫೋಟೊ ಹಾಕಿಲ್ಲ. ಕಾಂಗ್ರೆಸ್ ನಾಯಕರನ್ನು ಕಡೆಗಣಿಸಲಾಗುತ್ತದೆ. ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಬಂದ ಬಳಿಕ ಎಲ್ಲವನ್ನೂ ಹೇಳುತ್ತೇನೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರೂ ಆಗಿರುವ ಪುಟ್ಟರಂಗಶೆಟ್ಟಿ ಅಸಮಾಧಾನ ಹೊರಹಾಕಿದರು.
ದಸರಾ ವೆಬ್ಸೈಟ್ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಕೊನೆಗೊಳ್ಳುತ್ತಿಂದ್ದತೆಯೇ ‘ನನಗೆ ತುರ್ತು ಕೆಲಸವಿದೆ’ ಎಂದು ಹೇಳಿ ಹೊರನಡೆದರು.
ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೇಗೌಡ, ‘ಉಪಾಧ್ಯಕ್ಷರ ಪಟ್ಟಿಯಲ್ಲಿ ಹೆಸರು ಇಲ್ಲವಲ್ಲ ಎಂದು ಅವರು ಹೇಳಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಎಲ್ಲ ಸಚಿವರನ್ನು ಸಮಿತಿಗೆ ಉಪಾಧ್ಯಕ್ಷರನ್ನಾಗಿ ನೇಮಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಎನ್.ಮಹೇಶ್, ಸಾ.ರಾ.ಮಹೇಶ್ ಮತ್ತು ಪುಟ್ಟರಂಗಶೆಟ್ಟಿ ಅವರು ಸಮಿತಿಗೆ ಉಪಾಧ್ಯಕ್ಷರಾಗಿದ್ದಾರೆ. ತುರ್ತಾಗಿ ಹುಬ್ಬಳ್ಳಿಗೆ ತೆರಳಬೇಕಿದ್ದ ಕಾರಣ ಅವರು ಸಭೆಯಿಂದ ಅರ್ಧಕ್ಕೇ ತೆರಳಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.