ADVERTISEMENT

ಹಳೆ ಮೈಸೂರು ಭಾಗದಲ್ಲೂ ಶಾಸಕರು ಬಿಜೆಪಿ ಸೇರುವರು: ಸಚಿವ ಅಶೋಕ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 8:23 IST
Last Updated 18 ಜೂನ್ 2022, 8:23 IST
   

ತುಮಕೂರು: ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟಿಸುವ ಕೆಲಸ ನಡೆಯುತ್ತಿದೆ. ಕಾಂಗ್ರೆಸ್, ಜೆಡಿಎಸ್‌ನ ಹಾಲಿ, ಮಾಜಿ ಶಾಸಕರು ಸೇರಿದಂತೆ 10ರಿಂದ 12 ಜನ ಬಿಜೆಪಿ ಸೇರಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

ಗ್ರಾಮ ವಾಸ್ತವ್ಯ ಮಾಡಲು ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮಕ್ಕೆ ಶನಿವಾರ ಬಂದಿರುವ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿದರು.

ಪಾಠ ಶಾಲೆ: ಜನರ ಕಷ್ಟಗಳನ್ನು ತಿಳಿಯಲು, ಅವರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಗ್ರಾಮ ವಾಸ್ತವ್ಯ ಒಂದು ಪಾಠ ಶಾಲೆಯಾಗಲಿದೆ. ಮಾಯಸಂದ್ರ ಗ್ರಾಮದಲ್ಲಿ ಹಲವು ಕುಟುಂಬಗಳು‌ ವಿವಿಧ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿವೆ. ಜನರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ದಾಖಲೆಗಳನ್ನು ತಲುಪಿಸಲಾಗುವುದು ಎಂದು ಹೇಳಿದರು.

ADVERTISEMENT

ನಟ ಜಗ್ಗೇಶ್ ಲೋಕಸಭೆ ಸದಸ್ಯರಾಗಬೇಕು ಎಂಬ ಆಸೆಯಿಂದಲೇ ಪಕ್ಷ ಸೇರ್ಪಡೆಯಾಗಿದ್ದರು‌‌. ಆದರೆ ಅವರಿಗೆ ರಾಜ್ಯಸಭೆಯಲ್ಲಿ ಕೆಲಸ ಮಾಡಲು ಅವಕಾಶ‌ ದೊರೆತಿದೆ ಎಂದರು.

ಜಿಲ್ಲಾಧಿಕಾರಿ ವಾರಕ್ಕೊಮ್ಮೆ ತಾಲ್ಲೂಕು ಕಚೇರಿಗೆ ತೆರಳಿ ಅಲ್ಲಿನ ಕೆಲಸವನ್ನು ಅವಲೋಕಿಸಬೇಕು. ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಲ್ಲಿಯೇ ಇದ್ದು ಆಡಳಿತ ವರ್ಗವನ್ನು ಚುರುಕುಗೊಳಿಸಬೇಕು ಎಂದು ಹೇಳಿದರು.

ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಚುನಾವಣೆ ತಯಾರಿಗಾಗಿಯೇ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಒಂದು ವರ್ಷದ ಒಳಗಡೆ ಚುನಾವಣೆ ಎದುರಾಗಲಿದ್ದು, ಅದಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.