ಬಜೆಟ್ ಭಾಷಣದ ಟ್ಯಾಬ್ನೊಂದಿಗೆ ನಿರ್ಮಲಾ ಸೀತಾರಾಮನ್
– ಪಿಟಿಐ ಚಿತ್ರ
ಕೇಂದ್ರದ ಬಜೆಟ್ ದೇಶದ ಅಭಿವೃದ್ಧಿಗೆ ಪೂರಕವಾಗಿಲ್ಲ. ಕೃಷಿಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಹೋದ ಸಾಲಿನಲ್ಲಿ ಕೃಷಿಗೆ ₹ 1.70 ಲಕ್ಷ ಕೋಟಿ ನೀಡಲಾಗಿತ್ತು. ಅದನ್ನು ಈ ಬಾರಿ ₹ 1.62 ಲಕ್ಷ ಕೋಟಿಗೆ ಇಳಿಸಲಾಗಿದೆ. ಈ ಮೂಲಕ ಕೃಷಿ ಕ್ಷೇತ್ರಕ್ಕೆ ಅನ್ಯಾಯ ಮಾಡಲಾಗಿದೆ. ಕಬ್ಬು ಬೆಳೆಗಾರರ ನಿರೀಕ್ಷೆ ಹುಸಿಯಾಗಿದೆ. ಗ್ರಾಮೀಣ ಮೂಲ ಸೌಕರ್ಯಗಳಿಗೂ ಒತ್ತು ನೀಡಿಲ್ಲ.
-ಬಡಗಲಪುರ ನಾಗೇಂದ್ರ, ಅಧ್ಯಕ್ಷ, ರಾಜ್ಯ ರೈತ ಸಂಘ
ಬಜೆಟ್ ಜವಾಬ್ದಾರಿಯಿಂದ ಕೂಡಿದೆ. ದೇಶದ ಆರ್ಥಿಕ, ಸಾಮಾಜಿಕ ಸಮತೋಲನ ಮತ್ತು ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ. ಮೂಲ ಸೌಕರ್ಯಗಳಿಗೆ ಹೆಚ್ಚುವರಿ ಬಂಡವಾಳ ಹೂಡಿಕೆ, ತಂತ್ರಜ್ಞಾನ ಆಧಾರಿತ ಅಭಿವೃದ್ಧಿ, ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡುವ ಕ್ರಮಗಳಿವೆ.
ದಾರಿಪುರ ಚಂದ್ರಶೇಖರ್, ಬಿಜೆಪಿ ಮುಖಂಡ
ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರಿದೆ. ಕೃಷಿಕರ ಅಭಿವೃದ್ಧಿಗೆ ಪೂರಕವಲ್ಲದ ಬಜೆಟ್ ಇದಾಗಿದೆ. ರೈತ ಬೆಳೆಗಳಿಗೆ ಎಂಎಸ್ಪಿ ಖಾತ್ರಿ ಕಾಯ್ದೆಯ ಜಾರಿ ಬಗ್ಗೆ ಕ್ರಮ ಕೈಗೊಂಡಿಲ್ಲ. ರೈತರ ಸಾಲ ಮನ್ನಾ ಪ್ರಸ್ತಾಪವಿಲ್ಲ. ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ನೀಡಿ ವರ್ಷಪೂರ್ತಿ ಖರೀದಿಸುವ ಕೇಂದ್ರಗಳ ಆರಂಭಕ್ಕೆ ಕ್ರಮ ಕೈಗೊಂಡಿಲ್ಲ.
ಹಳ್ಳಿಕೆರೆಹುಂಡಿ ಭಾಗ್ಯರಾಜ್, ಅಧ್ಯಕ್ಷ, ರಾಜ್ಯ ಕಬ್ಬು ಬೆಳೆಗಾರರ ಸಂಘ
ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕದ ಪಾಲಿಗೆ ನಿರಾಶದಾಯಕವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ರೈಲು ಬಿಟ್ಟಿದ್ದಾರಷ್ಟೆ. ಜನರ ಆರ್ಥಿಕತೆ ವಿಕಸನಗೊಳಿಸುವ ಭರವಸೆ ಮೂಡಿಸುವಲ್ಲಿ ವಿಫಲವಾಗಿದೆ. ಉತ್ತರಪ್ರದೇಶ, ಪಶ್ಚಿಮ ಬಂಗಾಳದ ಚುನಾವಣೆ ಮೇಲೆ ಗಮನ ಹರಿಸಿರುವುದನ್ನು ಸಾರಿ ಹೇಳುತ್ತಿದೆ.
ಕೆ.ವಿ. ಮಲ್ಲೇಶ್, ನಗರಪಾಲಿಕೆ ಮಾಜಿ ಸದಸ್ಯ, ಮೈಸೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.