ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಇಲ್ಲಿನ ನ್ಯಾಯಾಲಯಕ್ಕೆ 8 ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಫರ್ಹಾನ್ ಪಾಷಾ, ಅಕ್ರಂ, ಅಬೀದ್ ಪಾಷಾ, ನೂರ್ಖಾನ್, ಮುಜೀಬ್, ಮುಜಾಮಿಲ್, ಮತಿನ್ಬೇಗ್ ಮತ್ತು ಇರ್ಫಾನ್ ಅವರನ್ನು ಪ್ರಕರಣದಲ್ಲಿ ಈಗಾಗಲೇ ಬಂಧಿಸಲಾಗಿದೆ.
ನವೆಂಬರ್ 17ರಂದು ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸೇಠ್ ಮೇಲೆ ಫರ್ಹಾನ್ ಪಾಷಾ ಎಂಬಾತ ತೀವ್ರವಾಗಿ ಹಲ್ಲೆ ನಡೆಸಿ, ಪರಾರಿಯಾಗುವಾಗ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದ. ನಂತರ, ಇತರೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದರು.
ಹಲ್ಲೆಯ ತೀವ್ರತೆ ಮನಗಂಡ ನಗರ ಪೊಲೀಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ ಅವರು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದರು. ಅಪರಾಧ ಪತ್ತೆ ದಳದ ಎಸಿಪಿ ಮರಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. 61 ದಿನಗಳ ಸುದೀರ್ಘ ತನಿಖೆಯ ನಂತರ ಇದೀಗ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.