ಮೈಸೂರು: ರೈತರ ಫಲವತ್ತಾದ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಂದೆ ಸೋಮವಾರ ಪ್ರತಿಭಟನೆ ಆರಂಭಿಸಿದರು.
‘ಬಲ್ಲಹಳ್ಳಿ ಉಳಿಸಿ ಹೋರಾಟ ಸಮಿತಿ’ ರಚಿಸಿಕೊಂಡಿರುವ ರೈತರು ಮುಡಾ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೇಂದ್ರ ಸರ್ಕಾರ 2013ರಲ್ಲಿ ಜಾರಿಗೆ ತಂದ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಬಾರದು ಎಂದು ಒತ್ತಾಯಿಸಿದರು.
ಈ ಕಾಯ್ದೆಗೆ ತಿದ್ದುಪಡಿ ತಂದು ಬಲ್ಲಹಳ್ಳಿ ಹಾಗೂ ಸುತ್ತಮುತ್ತ ಇರುವ ಗ್ರಾಮಗಳಾದ ರಾಮನಹುಂಡಿ, ಬೀರಿಹುಂಡಿ, ಕೆ.ಸಾಲುಂಡಿ, ಗೋವಳ್ಳಿ, ಕುಮಾರಬೀಡು, ಬಡಗಲಹುಂಡಿ, ಮರಟಿಕ್ಯಾತನಹಳ್ಳಿಯ ರೈತರ ಫಲವತ್ತಾದ ಭೂಮಿಗೆ ಕನಿಷ್ಠ ಬೆಲೆ ನೀಡಿ ಭೂಸ್ವಾಧೀನಪಡಿಸಿಕೊಳ್ಳುವ ಹುನ್ನಾರ ನಡೆದಿದೆ. ಇದರ ಹಿಂದಿರುವ ಮುಡಾ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಕೊಡಗು ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.
ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಸಂಘಟನೆಯ ಕಾರ್ಯದರ್ಶಿ ಗುರುಪ್ರಸಾದ್, ಮುಖಂಡರಾದ ಶಿವಕುಮಾರ್, ಕುಮಾರ, ಮಹೇಶ್, ಕಂದೇಗಾಲ ಮಹೇಶ್, ರಘು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.