ADVERTISEMENT

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಎತ್ತಂಗಡಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 3:37 IST
Last Updated 20 ಜೂನ್ 2021, 3:37 IST
ಡಾ.ಡಿ.ಬಿ. ನಟೇಶ್‌
ಡಾ.ಡಿ.ಬಿ. ನಟೇಶ್‌   

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಡಿ.ಬಿ.ನಟೇಶ್‌ ಅವರನ್ನು ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಜಂಟಿ ನಿರ್ದೇಶಕರಾಗಿದ್ದ ಶೀಲವಂತ ಎಂ.ಶಿವಕುಮಾರ್‌ ಅವರನ್ನು ಮುಡಾ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.

ಕುರುಬಾರಹಳ್ಳಿ ಸರ್ವೆ ನಂಬರ್‌ ನಾಲ್ಕರ ಭೂ ತಕರಾರಿಗೆ ಸಂಬಂಧಿಸಿದಂತೆ, ಮುಡಾ ಆಯುಕ್ತರಾಗಿದ್ದ ಡಾ.ಡಿ.ಬಿ.ನಟೇಶ್‌ ಈ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆಯಂತೆ ಮುಡಾ ವಿರುದ್ಧವೇ ಪ್ರಕರಣ ನಡೆಸಲು ವಕೀಲರ ಶುಲ್ಕವಾಗಿ ₹ 24.05 ಲಕ್ಷ ಪಾವತಿಸಿದ್ದರು. ಇದರ ಬಗ್ಗೆ ಎಲ್ಲೆಡೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ಎತ್ತಂಗಡಿ ಮಾಡಲಾಗಿದೆ.

ADVERTISEMENT

ಇದರಿಂದಾಗಿ ಮೈಸೂರಿನಲ್ಲಿ ಅಧಿಕಾರಿಗಳ ಎತ್ತಂಗಡಿ ಪರ್ವ ಮುಂದುವರೆದಿದೆ. ಜಿಲ್ಲೆಯ ಆಯಕಟ್ಟಿನ ಹುದ್ದೆಗಳಲ್ಲಿದ್ದ ಅಧಿಕಾರಿಗಳ ವರ್ಗ ನಡೆದಿದೆ.

ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ, ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾ ನಾಗ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಅಮರನಾಥ್‌ ಎತ್ತಂಗಡಿಯಾದ ಬೆನ್ನಿಗೆ ಇದೀಗ ನಟೇಶ್‌ ಎತ್ತಂಗಡಿಯಾಗಿದೆ.

ಕೆಲ ದಿನಗಳ ಹಿಂದಷ್ಟೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಿ.ಬಿ.ರಿಷ್ಯಂತ್ ಅವರನ್ನು ವರ್ಗಾಯಿಸಲಾಗಿತ್ತು. ಮೂರು ತಿಂಗಳ ಹಿಂದೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಎ.ಎಂ.ಯೋಗೀಶ್‌ ಮೈಸೂರಿಗೆ ವರ್ಗಾವಣೆಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.