ಮೈಸೂರು: ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರವೂ ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದು, ರಾತ್ರಿ 9ರ ನಂತರವೂ ಮಾಹಿತಿಯನ್ನು ದಾಖಲಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದರು.
ಬುಧವಾರ ಮುಡಾ ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಮತ್ತೆ ಗುರುವಾರ ಬೆಳಿಗ್ಗೆ ಕಚೇರಿಗೆ ಭೇಟಿ ಕೊಟ್ಟರು.
ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಬದಲಿ ನಿವೇಶನ ಕೊಡಲು 2020ರ ನವೆಂಬರ್ 20ರಂದು ನಡೆದ ಮುಡಾ ಸಾಮಾನ್ಯಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಆ ಸಭೆಯ ಧ್ವನಿಮುದ್ರಿಕೆ ದಾಖಲೆಗಳನ್ನು ಪಡೆದು, ಸಭೆಯಲ್ಲಿ ಪಾಲ್ಗೊಂಡಿದ್ದ 19 ಸದಸ್ಯರ ಮಾತುಗಳನ್ನೂ ಲಿಖಿತ ರೂಪದಲ್ಲಿ ದಾಖಲಿಸಿಕೊಂಡರು.
ರಾತ್ರಿ ಕಚೇರಿಗೇ ಊಟ ತರಿಸಿಕೊಂಡ 8 ಅಧಿಕಾರಿ–ಸಿಬ್ಬಂದಿಯ ತಂಡವು ಊಟದ ತರುವಾಯವೂ ಹೇಳಿಕೆ ದಾಖಲಿಸಿಕೊಳ್ಳುವ ಕಾರ್ಯ ಮುಂದುವರಿಸಿತ್ತು. ಈ ಸಂದರ್ಭ ಮುಡಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯೂ ಜೊತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.