ಮುಖ್ಯಮಂತ್ರಿ ಚಂದ್ರು
ಮೈಸೂರು: ‘ಪ್ರಜಾಪ್ರಭುತ್ವದ ಹೆಸರಿನಲ್ಲಿ ಸರ್ವಾಧಿಕಾರಿ ಧೋರಣೆ ನಡೆಯುತ್ತಿದ್ದು, ಸಿಬಿಐ, ಇಡಿ, ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಕುಟುಂಬ ರಾಜಕಾರಣದಿಂದ ಯಾವ ಪಕ್ಷವೂ ಹೊರತಾಗಿಲ್ಲ’ ಎಂದು ಚಲನಚಿತ್ರ ನಟ ‘ಮುಖ್ಯಮಂತ್ರಿ’ ಚಂದ್ರು ವಿಷಾದ ವ್ಯಕ್ತಪಡಿಸಿದರು.
‘ದಾರಿ’ ಫೌಂಡೇಷನ್ ವತಿಯಿಂದ ಇಲ್ಲಿನ ಯುವರಾಜ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ಮುಕ್ತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರಜಾಪ್ರಭುತ್ವ ಉಳಿಯಬೇಕಾದರೆ ಸ್ಥಳೀಯ ಸಂಸ್ಥೆಗಳಿಂದ ಹಿಡಿದು ವಿಧಾನಸಭೆ, ಲೋಕಸಭೆವರೆಗೆ ಯೋಗ್ಯರೇ ಆಯ್ಕೆಯಾಗಬೇಕು. ಯಾವುದೇ ರಾಜಕೀಯ ಪಕ್ಷದವರು ಯೋಗ್ಯರಿಗೆ ಟಿಕೆಟ್ ನೀಡದಿದ್ದಲ್ಲಿ ಸ್ಥಳೀಯರೆ ಉತ್ತಮ ಅಭ್ಯರ್ಥಿ ಕಣಕ್ಕಿಳಿಸಿ ಗೆಲ್ಲಿಸಬೇಕು. ಕಡ್ಡಾಯವಾಗಿ ಮತದಾನ ಮಾಡಬೇಕು. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಸಮಸ್ಯೆ ಆಗುತ್ತಿರಲಿಲ್ಲ: ‘ಎಲ್ಲರೂ ಬಸವಣ್ಣನ ಸಂದೇಶಗಳನ್ನು ಪಾಲಿಸಿದ್ದರೆ, ಸಮಾಜದಲ್ಲಿ ಯಾವುದೇ ಸಮಸ್ಯೆ ಎದುರಾಗುತ್ತಿರಲಿಲ್ಲ’ ಎಂದರು.
‘ದೇಶದಲ್ಲಿ ಸಾವಿರಾರು ಜಾತಿಗಳಿವೆ. ಸಮಾನತೆ ತರಬೇಕಾದರೆ ಯಾವ ಜಾತಿಯವರು ಎಷ್ಟಿದ್ದಾರೆ ಎಂಬುದನ್ನು ತಿಳಿದು ಆ ಪ್ರಕಾರ ಸೌಲಭ್ಯ ಕಲ್ಪಿಸಬೇಕಾಗುತ್ತದೆ. ಆದ್ದರಿಂದ ಜಾತಿ ಗಣತಿ ವಿರೋಧಿಸುವುದು ಸರಿಯಲ್ಲ’ ಎಂದು ತಿಳಿಸಿದರು.
ವಕೀಲರಾದ ಎಂ.ಎನ್. ಸುಮನಾ, ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಮೈಸೂರು ವಿ.ವಿ ಸಿಂಡಿಕೇಟ್ ಸದಸ್ಯ ಶಂಕರ್ ಎಂ. ಹುಯಿಲಾಳು ಮಾತನಾಡಿದರು.
ಪ್ರಾಂಶುಪಾಲ ಪ್ರೊ.ಎಸ್. ಮಹದೇವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಪ್ರೊ.ಕೆ. ಅಜಯ್ಕುಮಾರ್, ದಾರಿ ಫೌಂಡೇಷನ್ ಅಧ್ಯಕ್ಷ ಎಲ್. ರಂಗಯ್ಯ, ಖಜಾಂಚಿ ವಿಶ್ವನಾಥ್ ಕುಲಕರ್ಣಿ, ಸಂಚಾಲಕ ಪ್ರಭಾಕರ್ ಪಾಲ್ಗೊಂಡಿದ್ದರು.
ಸುಮನ್ ತಂಡದವರು ನಾಡಗೀತೆ ಹಾಡಿದರು. ಕಾರ್ಯದರ್ಶಿ ತಗಡೂರು ವೀರೇಶ್ಕುಮಾರ್ ಮಹಾಮನೆ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಡಿ. ಪರಶುರಾಮ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.