ADVERTISEMENT

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಯಣಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 8:06 IST
Last Updated 1 ಅಕ್ಟೋಬರ್ 2020, 8:06 IST
ಗಜಪಡೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿ ಚಾಲನೆ ನೀಡಿದರು.
ಗಜಪಡೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿ ಚಾಲನೆ ನೀಡಿದರು.   
""
""

ಮೈಸೂರು: ನಾಡ ಹಬ್ಬ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆ ಪಯಣಕ್ಕೆ ಗುರುವಾರ ನಾಗರಹೊಳೆ ದ್ವಾರದ ಬಳಿಯಲ್ಲೇ‌ ಚಾಲನೆ ನೀಡಲಾಯಿತು.

ಸಂಪ್ರದಾಯದಂತೆ ತುಲಾ ಲಗ್ನದಲ್ಲಿ ಬೆಳಿಗ್ಗೆ 10.10 ರಿಂದ 11 ಗಂಟೆಯ ಸಮಯದಲ್ಲಿ ವೀರನಹೊಸಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿದರು.

ಕೋವಿಡ್ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾದಲ್ಲಿ ಅಂಬಾರಿ ಸಾರಥಿ ಅಭಿಮನ್ಯು(54), ವಿಜಯ(61), ಕಾವೇರಿ(42), ಗೋಪಿ(38) ಹಾಗೂ ವಿಕ್ರಮ(47) ಸೇರಿದಂತೆ ಐದು ಆನೆಗಳು ಮಾತ್ರ ಭಾಗವಹಿಸಲಿವೆ.

ADVERTISEMENT

ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಕೋವಿಡ್ ಹಿನ್ನೆಲೆ ಈ ಬಾರಿ ದಸರೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ಬಾರಿ ಸಂಪ್ರದಾಯದಂತೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಯಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗತ್ ರಾಮ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಸಿ.ಅಲೆಗ್ಸಾಂಡರ್, ಮಹೇಶ್‌ಕುಮಾರ್, ಡಾ.ಕೆ.ಸಿ.ಪ್ರಶಾಂತ್ ಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ನಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪಿ.ಮಹದೇವ್, ಅಂಟೋನಿ ಪೌಲ್ ಇನ್ನಿತರರು ಉಪಸ್ಥಿತರಿದ್ದರು.

ಗಜಪಡೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.