ಮೈಸೂರಿನಲ್ಲಿ ಮಂಗಳವಾರ, ಸ್ವಚ್ಛತೆ, ಶುಚಿತ್ವ ಮತ್ತು ನೈರ್ಮಲ್ಯಕ್ಕಾಗಿ ಆರೋಗ್ಯ ಇಲಾಖೆಯು ನೀಡುವ ರಾಜ್ಯಮಟ್ಟದ, 2021– 22ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಪಡೆದ ಹಾಸನದ ಶ್ರೀ ಚಾಮರಾಜೇಂದ್ರ ಬೋಧನಾ ಅಸ್ಪತ್ರೆ ಸಿಬ್ಬಂದಿಯೊಂದಿಗೆ ಇತರರು ಪ್ರಜಾವಾಣಿ ಚಿತ್ರ
ಮೈಸೂರು: ‘ಜಿಲ್ಲೆಯಲ್ಲಿ ಶೇ 10ರಷ್ಟು ಆರೋಗ್ಯ ಕೇಂದ್ರಗಳು ಮಾತ್ರವೇ ‘ಕಾಯಕಲ್ಪ’ ಗುಣಮಟ್ಟದಲ್ಲಿವೆ. ಮುಖ್ಯಮಂತ್ರಿಗಳ ತವರಿನಲ್ಲೇ ಹೀಗಾಗಿರುವುದು ವಿಷಾದನೀಯ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ನಗರದಲ್ಲಿ ಮಂಗಳವಾರ ರಾಜ್ಯಮಟ್ಟದ ‘ಕಾಯಕಲ್ಪ’ ಪ್ರಶಸ್ತಿ ವಿತರಿಸಿ ಮಾತನಾಡಿ, ‘ಕಾರ್ಯಕ್ರಮದ ಆತಿಥ್ಯ ವಹಿಸಿರುವ ಮೈಸೂರಿನಲ್ಲಿ ಅಧಿಕಾರಿಗಳು ಕನಿಷ್ಠ ಜವಾಬ್ದಾರಿಯನ್ನೂ ನಿರ್ವಹಿಸಿಲ್ಲ ಎಂಬುದನ್ನು ಈ ಅಂಕಿ– ಅಂಶ ಎತ್ತಿ ಹಿಡಿದಿದೆ. ಯಾಕೆ ಈ ಪರಿಸ್ಥಿತಿ ಇದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಅವರನ್ನು ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡರು.
‘ಯಾವುದೇ ಕಾರಣ ನೀಡದೆ ಮುಂದಿನ ಸಾಲಿನಲ್ಲಿ ಜಿಲ್ಲೆಯ ಶೇ 70ರಷ್ಟು ಕೇಂದ್ರಗಳು ‘ಕಾಯಕಲ್ಪ’ ಮಾನ್ಯತೆ ಪಡೆಯುವಲ್ಲಿ ಕ್ರಮ ವಹಿಸಬೇಕು’ ಎಂದು ಸೂಚಿಸಿದರು.
‘ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ₹ 500 ಕೋಟಿ ವೆಚ್ಚದಲ್ಲಿ ಮೂಲ ಸೌಕರ್ಯ ಒದಗಿಸುವ ಪ್ರಯತ್ನ ಆರಂಭವಾಗಿದ್ದು, ಕೆಲವೆಡೆ ಟೆಂಡರ್ ಕರೆಯಲಾಗಿದೆ’ ಎಂದು ತಿಳಿಸಿದರು.
‘ಜನಪ್ರತಿನಿಧಿಗಳು, ಅಧಿಕಾರಿಗಳು ಹೊಸ ಆಸ್ಪತ್ರೆ, ಆರೋಗ್ಯ ಕೇಂದ್ರ ಸ್ಥಾಪಿಸಲು ಉತ್ಸುಕರಾಗಿರುತ್ತಾರೆ. ಆದರೆ ಇರುವ ಆಸ್ಪತ್ರೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಆಸಕ್ತರಾಗಿರುವುದಿಲ್ಲ. ಹೀಗಾಗಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸಲಾಗುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.