ಮೈಸೂರು: ಶತಮಾನಕ್ಕೂ ಹೆಚ್ಚಿನ ಇತಿಹಾಸ ಹೊಂದಿರುವ ಇಲ್ಲಿನ ಮಹಾರಾಣಿ ಅವರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯನ್ನು ನೆಲಸಮ ಮಾಡಿ ರಾಮಕೃಷ್ಣ ಆಶ್ರಮಕ್ಕೆ ಜಾಗವನ್ನು ಹಸ್ತಾಂತರಿಸಬಾರದು ಎಂದು ಆಗ್ರಹಿಸಿ ಕನ್ನಡ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಭಾನುವಾರವೂ ಮುಂದುವರಿದಿದೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ದಲಿತ ಸಂಘರ್ಷ ಸಮಿತಿ ಸೇರಿದಂತೆ ಅನೇಕ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿವೆ.
ಶಾಸಕ ಎಲ್.ನಾಗೇಂದ್ರ ಭೇಟಿ ನೀಡಿ ನ್ಯಾಯ ಕೊಡಿಸುವ ಭರವಸೆ ನೀಡಿದರು.
ಸ್ವಾಮಿ ವಿವೇಕಾನಂದ ಅವರು ಮೈಸೂರಿಗೆ ಭೇಟಿ ನೀಡಿದ್ದಾಗ ಇಲ್ಲಿ ತಂಗಿದ್ದರು. ಇದರ ನೆನಪಿಗೆ ಇಲ್ಲೊಂದು ಸ್ಮಾರಕ ನಿರ್ಮಿಸಲು ರಾಮಕೃಷ್ಣ ಆಶ್ರಮ ಹೊರಟಿದೆ. ಇದಕ್ಕಾಗಿ ಸರ್ಕಾರ ಶಾಲೆ ನೆಲಸಮಗೊಳಿಸಲು ಮುಂದಾಗಿರುವುದು ಪ್ರತಿಭಟನಾಕಾರರನ್ನು ಕೆರಳಿಸಿದೆ.
ಕನ್ನಡ ಕ್ರಿಯಾ ಸಮಿತಿಯ ಪ್ರಧಾನಕಾರ್ಯದರ್ಶಿ ಸ.ರಾ.ಸುದರ್ಶನ, ಪಂಡಿತಾರಾಧ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಂ.ಚಂದ್ರಶೇಖರ, ರಂಗಕರ್ಮಿ ಜನಾರ್ದನ್, ಮೈಮ್ ರಮೇಶ್, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಬೆಟ್ಟಯ್ಯಕೋಟೆ, ಚೋರನಹಳ್ಳಿ ಶಿವಣ್ಣ, ಪುರುಷೋತ್ತಮ್ ಹಾಗೂ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.