ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಕ್ರಮವಹಿಸಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ
ಬೆಟ್ಟದಪುರ: ‘ಎಲ್ಲಾ ಸಮುದಾಯದ ಜನರು ಒಗ್ಗಟ್ಟಾಗಿದ್ದರೆ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ’ ಎಂದು ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿದರು.
ಸಮೀಪದ ಹಲಗನಹಳ್ಳಿಯಲ್ಲಿ ಮಂಗಳವಾರ ನೂತನ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ಅಲ್ಪಸಂಖ್ಯಾತರು, ಹಿಂದೂಗಳು ಒಗ್ಗಟ್ಟಾಗಿ ಅಭಿವೃದ್ಧಿಗೆ ಸಹಕಾರ ನೀಡಿರುವುದರಿಂದಲೇ ಬೇಕಾದ ಸೌಲಭ್ಯಗಳು ದೊರಕಿವೆ. ಎಲ್ಲರೂ ಒಮ್ಮತವಾಗಿ ಇದ್ದರೆ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದರು.
ಈ ಭಾಗದಲ್ಲಿರುವ ಎರಡು ಮಸೀದಿಗಳ ಅಭಿವೃದ್ಧಿಗೂ ಸಂಬಂಧಪಟ್ಟ ಸಚಿವರ ಬಳಿ ಮಾತನಾಡಿದ್ದೇನೆ. ಸಾಧ್ಯವಾದಷ್ಟು ಹೆಚ್ಚು ಅನುದಾನ ನೀಡುವ ಭರವಸೆ ನೀಡಿದರು.
ಪ್ರತಿ ಗ್ರಾಮಗಳಲ್ಲೂ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳು ಖುದ್ದು ಹಾಜರಾಗಬೇಕು. ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಅಲ್ಲಿಯೇ ಸಾಧ್ಯವಾದಷ್ಟು ಬಗೆಹರಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.
ಇದೇ ವೇಳೆ ಹಲಗನಹಳ್ಳಿ ಗ್ರಾಮದಲ್ಲಿ ಗ್ರಾಮಕ್ಕೆ ಬಸ್ ನಿಲ್ದಾಣದ ವ್ಯವಸ್ಥೆ, ಕೆರೆ-ಕಟ್ಟೆ ದುರಸ್ತಿ ಮಾಡಿಸುವಂತೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬಸ್ ನಿಲ್ದಾಣ ಹಾಗೂ ಕೆರೆ-ಕಟ್ಟೆಗಳ ಅಭಿವೃದ್ಧಿಗೆ ಶೀಘ್ರವೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಮನುಗನಹಳ್ಳಿ, ನಿಲವಾಡಿ ಗ್ರಾಮಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಸಮೀಪದ ಅಡುಗೂರು, ಕೋಮಲಾಪುರ ಗ್ರಾಮಗಳ ಪರಿಶಿಷ್ಟ ಜಾತಿ ಕಾಲೊನಿಯ ಸಿ.ಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ವೀಣಾ ವೆಂಕಟೇಶ್, ನಿರ್ದೇಶಕ ಪ್ರಕಾಶ್ ಮುಖಂಡರಾದ ಲೋಕೇಶ್, ರಹಮತ್ ಜಾನ್ ಬಾಬು, ಹೊಲದಪ್ಪ, ನಫಿಜ್ ಖಾನ್, ಶಂಕರೇಗೌಡ, ವಕೀಲರಾದ ಸುಧೀಶ್, ಸೂಹೆಲ್ ಪಾಷಾ, ಶೇಖರ್, ವೆಂಕಟೇಶ್, ನಾಸಿರ್, ನಾಗರಾಜೇಗೌಡ, ತಹಶೀಲ್ದಾರ್ ನಿಸರ್ಗಪ್ರಿಯ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸುನಿಲ್ ಕುಮಾರ್, ಪಶುಸಂಗೋಪನೆ ನಿರ್ದೇಶಕರಾದ ಸೋಮಯ್ಯ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.