
ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಬಹುಮಾನ ವಿತರಿಸಿದರು
ಮೈಸೂರು: ಇಲ್ಲಿನ ಮಹಾನಗರಪಾಲಿಕೆಯ ವತಿಯಿಂದ ಶನಿವಾರ ನಡೆದ ಸ್ವಚ್ಛತಾ ಅಭಿಯಾನದಲ್ಲಿ, ಒಂದೇ ಗಂಟೆಯಲ್ಲಿ 600 ಕೆ.ಜಿ. ಒಣ ಕಸ ಸಂಗ್ರಹಿಸಲಾಯಿತು.
ಸಾಂಸ್ಕೃತಿಕ ನಗರಿ ಮೈಸೂರನ್ನು ಸ್ವಚ್ಛತೆಯಲ್ಲಿ ಅಗ್ರಸ್ಥಾನಕ್ಕೇರಿಸುವ ಸಂಕಲ್ಪದೊಂದಿಗೆ ಪಾಲಿಕೆಯು ಹಮ್ಮಿಕೊಂಡಿರುವ ‘ಸ್ವಚ್ಛ ಮೈಸೂರು’ ಅಭಿಯಾನದ ಭಾಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸ್ವಚ್ಛ ಸರ್ವೇಕ್ಷಣ್ 2.0 ಅಭಿಯಾನದಲ್ಲಿ ಸಾರ್ವಜನಿಕರ ಸಹಭಾಗಿತ್ವ ಇದಾಗಿತ್ತು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಶ್ರಮದಾನದಲ್ಲಿ ಫೀನಿಕ್ಸ್ ಇಂಟರ್ನ್ಯಾಷನಲ್ ಅಕಾಡೆಮಿಯ ವಿದ್ಯಾರ್ಥಿಗಳು, ಜೆಎಸ್ಎಸ್ ಕಾಲೇಜಿನ ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಸೇರಿದಂತೆ 200ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. 600 ಕೆ.ಜಿ. ಒಣ ಕಸ ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು.
ಅಭಿಯಾನದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸ್ವಯಂಸೇವಕರು ಪ್ರಥಮ ಬಹುಮಾನವನ್ನು ಮುಡಿಗೇರಿಸಿಕೊಂಡರೆ, ಫೀನಿಕ್ಸ್ ಇಂಟರ್ನ್ಯಾಷನಲ್ ಅಕಾಡೆಮಿ ದ್ವಿತೀಯ ಬಹುಮಾನ ಪಡೆಯಿತು. ಜೆಎಸ್ಎಸ್ ತೃತೀಯ ಬಹುಮಾನ ಗಳಿಸಿತು.
ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಸಮೀರ್ ಪ್ರಕಾಶ್ ಕೋಡೆ, ವಲಯ ಆಯುಕ್ತ ರಮೇಶ್ ಎ., ಸ್ವಚ್ಛ ಭಾರತ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಎಇಇ ಮೃತ್ಯುಂಜಯ ಕೆ.ಎಸ್., ಎಇಇ ಮೀನಾಕ್ಷಿ, ಪರಿಸರ ಎಂಜಿನಿಯರ್ಗಳು ಮತ್ತು ಹೆಲ್ತ್ ಇನ್ಸ್ಪೆಕ್ಟರ್ಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.