ಪ್ರಮೋದಾದೇವಿ ಒಡೆಯರ್
ಮೈಸೂರು: ‘ಈ ವರ್ಷದ ದಸರಾ ಆಚರಣೆಯ ಬೆಳವಣಿಗೆಗಳು ಕಳವಳಕಾರಿಯಾಗಿವೆ’ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ರಾಜ್ಯ ಸರ್ಕಾರವು ಆಯೋಜಿಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಹಾಗೂ ವಿಶೇಷವಾಗಿ ಚಾಮುಂಡಿ ಬೆಟ್ಟದ ಮೇಲಿರುವ ಪವಿತ್ರ ಚಾಮುಂಡೇಶ್ವರಿ ದೇವಸ್ಥಾನದ ಸುತ್ತ ನಡೆದಿರುವ ರಾಜಕೀಯವು ತೀವ್ರ ಬೇಸರ ಮೂಡಿಸಿದೆ’ ಎಂದು ತಿಳಿಸಿದ್ದಾರೆ.
‘ಈ ವರ್ಷದ ನಾಡಹಬ್ಬ (ಜನತಾ ದಸರಾ) ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆಯು ಸಂಘರ್ಷದ ಅಭಿಪ್ರಾಯಗಳಿಗೆ ಕಾರಣವಾಗಿದೆ. ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿಲ್ಲ ಎಂಬಂತಹ ಸಂವೇದನಾರಹಿತ ಹೇಳಿಕೆ ಅನಗತ್ಯವಾಗಿತ್ತು. ಅದು ಹಿಂದೂ ದೇವಸ್ಥಾನ ಅಲ್ಲದಿದ್ದರೆ, ಅದನ್ನು ಎಂದಿಗೂ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತರುತ್ತಿರಲಿಲ್ಲ’ ಎಂದು ಪ್ರತಿಪಾದಿಸಿದ್ದಾರೆ.
‘ಸರ್ಕಾರದ ದಸರಾ ಸಾಂಸ್ಕೃತಿಕ ಆಚರಣೆಯಷ್ಟೆ ಎಂಬುದು ನಮ್ಮ ಅಭಿಪ್ರಾಯ. ರಾಜ್ಯ ಸರ್ಕಾರವು ಇಂತಹ ಉತ್ಸವವನ್ನು ನಡೆಸುವುದರಿಂದ ಧಾರ್ಮಿಕ ಪಾವಿತ್ರ್ಯ, ಸಂಪ್ರದಾಯ ಅಥವಾ ಪರಂಪರೆಯನ್ನು ಪ್ರತಿಪಾದಿಸಲು ಸಾಧ್ಯವಿಲ್ಲ. ಸರ್ಕಾರವು ಆಯೋಜಿಸುವ ಆಚರಣೆಗಳು ಧಾರ್ಮಿಕ ಸ್ವರೂಪದ್ದಾಗಿಲ್ಲ’ ಎಂದು ವಿಶ್ಲೇಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.