ADVERTISEMENT

ಮೈಸೂರು ದಸರಾ: ಆದಿವಾಸಿಗಳೊಂದಿಗೆ ಫೋಟೊಸೆಷನ್‌ಗೆ ದ್ರೌ‍ಪದಿ ಸಮ್ಮತಿ

ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2022, 6:17 IST
Last Updated 25 ಸೆಪ್ಟೆಂಬರ್ 2022, 6:17 IST
   

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನದ ಹಿನ್ನೆಲೆಯಲ್ಲಿ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಪೂರ್ವ ಸಿದ್ಧತೆ ಪರಿಶೀಲಿಸಿದರು.

ವೇದಿಕೆ, ಆಸನಗಳು, ಭದ್ರತೆ ಮೊದಲಾದ ವ್ಯವಸ್ಥೆಯನ್ನು ವೀಕ್ಷಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರಾಷ್ಟ್ರಪತಿಯವರ ಕಚೇರಿಯ ಸೂಚನೆಗಳ ಪ್ರಕಾರವೇ ವೇದಿಕೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸೆ.26ರಂದು ನಾಡಹಬ್ಬದ ಉದ್ಘಾಟನೆಗೆ ಸಿದ್ಧತೆ ನಡೆದಿದೆ. ವೇದಿಕೆಯಲ್ಲಿ 13 ಮಂದಿಗೆ ಆಸನಗಳಿರಲಿವೆ. 1,100 ಮಂದಿಗೆ ಆಸನಗಳನ್ನು ಹಾಕಲಾಗಿದೆ’ ಎಂದರು.

ADVERTISEMENT

‘ರಾಷ್ಟ್ರಪತಿಗಳು ಮೊದಲು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ದಸರಾ ಉದ್ಘಾಟಿಸಲಿದ್ದಾರೆ. ಹುಣಸೂರು, ಪಿರಿಯಾ‍ಪಟ್ಟಣ ಹಾಗೂ ಎಚ್‌.ಡಿ. ಕೋಟೆ ತಾಲ್ಲೂಕಿನ ಆದಿವಾಸಿಗಳೊಂದಿಗೆ ಫೋಟೊ ಸೆಷನ್‌ಗೆ 10 ನಿಮಿಷ ಸಮಯ ಕೊಟ್ಟಿದ್ದಾರೆ’ ಎಂದು ತಿಳಿಸಿದರು.

ಸಂಸದ ಪ್ರತಾಪ ಸಿಂಹ, ಮೇಯರ್ ಶಿವಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಮಂಜುನಾಥಸ್ವಾಮಿ, ಚಾಮುಂಡಿಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.