
ಮೈಸೂರು: ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯು ಜನರಿಗೆ ಹತ್ತಿರದಲ್ಲಿದ್ದುಕೊಂಡು ಅವರ ಬದುಕನ್ನು ಸುಧಾರಿಸುವುದಾಗಿದೆ. ಹೀಗಾಗಿ, ಅಧಿಕಾರಿಗಳು ಹೆಚ್ಚು ಜನಸ್ನೇಹಿಯಾಗಿ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹೇಳಿದರು.
ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯಿತಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳು ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ಮೈಸೂರು ಜಿಲ್ಲಾ ಆರ್ಡಿಪಿಆರ್ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಹಾಗೂ ಬಹುಮಾನ ವಿತರಣೆ’ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕೆಲಸ ಮಾಡಿದ್ದು ನಿಜವಾಗಿಯೂ ಹೆಚ್ಚು ತೃಪ್ತಿ ತಂದಿದೆ. ಜಿಲ್ಲೆಯ ಈಗಿನ ಸಿಇಒ ನೇತೃತ್ವದಲ್ಲಿ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಉತ್ತಮ ಐಎಎಸ್ ಅಧಿಕಾರಿಯಾಗಿ ಯುಕೇಶ್ಕುಮಾರ್ ಗುರುತಿಸಿಕೊಂಡಿದ್ದಾರೆ’ ಎಂದು ಶ್ಲಾಘಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ಕುಮಾರ್, ‘ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಯ ನೌಕರರು ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದಾರೆ. ಪ್ರತಿಭೆ ಅನಾವರಣಗೊಳಿಸಿದ್ದಾರೆ’ ಎಂದರು.
‘ಎಲ್ಲಾ ನೌಕಕರು ಉತ್ಸಾಹದಿಂದ ಕೆಲಸ ಮಾಡಿ, ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಬೇಕು. ಹೆಚ್ಚಿನ ಕಾರ್ಯಕ್ಷಮತೆಯಿಂದ ಜಿಲ್ಲೆಯನ್ನು ಮಾದರಿಯಾಗಿ ಮಾಡಬೇಕು’ ಎಂದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಜಿ.ಪಂ. ಉಪ ಕಾರ್ಯದರ್ಶಿಗಳಾದ ಬಿ.ಎಂ.ಸವಿತಾ, ಭೀಮಪ್ಪ ಕೆ.ಲಾಳಿ, ಮುಖ್ಯ ಯೋಜನಾಧಿಕಾರಿ ಕೆ.ಪ್ರಭುಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಪಿ.ಧರಣೇಶ್, ಸಿ.ಕೃಷ್ಣ, ಪ್ರೇಮ್ಕುಮಾರ್, ವಿ.ಪಿ.ಕುಲದೀಪ್, ಎ.ಎನ್.ರವಿ, ಕೆ.ಹೊಂಗಯ್ಯ, ಸುನೀಲ್ ಕುಮಾರ್, ಕೆ.ರಂಗಸ್ವಾಮಿ, ಪಿಡಿಒಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ರುಕ್ಮಾಂಗದ, ಪ್ರಕಾಶ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.